ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆಯಿತು.ಅಂಚೆ ಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ಭಾರತೀಯ ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಸುಧಾಕರ ಮಲ್ಯ, ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ಚಾರಿತ್ರಿಕ ಮಹತ್ವವನ್ನು ದಾಖಲಿಸಿ ದೇಶ ವಿದೇಶಗಳಲ್ಲಿ ಪಸರಿಸಿದೆ. ಮೈ ಸ್ಟ್ಯಾಂಪ್ ಮೂಲಕ ಚಾರಿತ್ರಿಕ ಮಹತ್ವದ ಘಟನೆಗಳ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಅಂಚೆ ಚೀಟಿ ಬಿಡುಗಡೆ ಮಾಡಲು ಅವಕಾಶ ನೀಡಿದೆ. ಮೈ ಸ್ಟ್ಯಾಂಪ್ ವ್ಯವಸ್ಥೆ ಇರುವವರೆಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರು ಉಳಿಯುತ್ತದೆ. ಅ.6 ರಿಂದ ಅ.10ರ ವರೆಗೆ ಅಂಚೆ ಇಲಾಖೆ ವತಿಯಿಂದ ಅಂಚೆ ಸಪ್ತಾಹ ಆಚರಿಸಲಾಗುತ್ತಿದೆ ಎಂದರು.ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮಾತನಾಡಿ, ಅಂಚೆ ಇಲಾಖೆ ಇಂದು ಬ್ಯಾಂಕ್ಗೆ ಸಮಾನಾಂತರವಾಗಿ ಬೆಳೆದಿದ್ದು, ಜನರಿಗೆ ವಿವಿಧ ಸೇವೆಗಳನ್ನು ಉತ್ತಮವಾಗಿ ಒದಗಿಸುತ್ತಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮವನ್ನು ಸ್ಮರಣೀಯವಾಗಿಸಲು ಅಂಚೆ ಚೀಟಿ ಹೊರತಂದಿರುವುದು ಶ್ಲಾಘನೀಯ ಎಂದರು.ಹಿರಿಯ ಪತ್ರಕರ್ತ ಕೆ. ಆನಂದ ಶೆಟ್ಟಿ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ, ಹಿರಿಯ ಪತ್ರಕರ್ತ ರಾಮಕೃಷ್ಣ ಆರ್., ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಇದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.