ಸಾರಾಂಶ
ಭಾರತೀಯ ಸನಾತನ ಯೋಗ ಪದ್ಧತಿಯು ಜಗತ್ತಿನ ಎಲ್ಲಾ ಧರ್ಮಗಳಿಗಿಂತಲೂ ಶ್ರೇಷ್ಠವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತೀಯ ಸನಾತನ ಪರಂಪರೆಯು ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ ಎಂದರು. ಇತ್ತೀಚೆಗೆ ವಿದೇಶಗಳಲ್ಲೂ ಭಾರತೀಯ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಪಾಲಿಸುವವರ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ವೈಜ್ಞಾನಿಕ ತಳಹದಿಯ ಮೇಲೆ ನಿಂತಿರುವ ನಮ್ಮ ಧರ್ಮದ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗಬೇಕಾಗಿದೆ. ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸವು ಅನಿವಾರ್ಯವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಭಾರತೀಯ ಸನಾತನ ಯೋಗ ಪದ್ಧತಿಯು ಜಗತ್ತಿನ ಎಲ್ಲಾ ಧರ್ಮಗಳಿಗಿಂತಲೂ ಶ್ರೇಷ್ಠವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಗುರುವೆಗೌಡ ಕಲ್ಯಾಣ ಮಂಟಪದಲ್ಲಿ ಯೋಗ ಚೇತನ ಟ್ರಸ್ಟ್ನಿಂದ ಆಯೋಜಿಸಲ್ಪಟ್ಟ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತೀಯ ಸನಾತನ ಪರಂಪರೆಯು ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ ಎಂದರು. ಇತ್ತೀಚೆಗೆ ವಿದೇಶಗಳಲ್ಲೂ ಭಾರತೀಯ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಪಾಲಿಸುವವರ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ವೈಜ್ಞಾನಿಕ ತಳಹದಿಯ ಮೇಲೆ ನಿಂತಿರುವ ನಮ್ಮ ಧರ್ಮದ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗಬೇಕಾಗಿದೆ. ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸವು ಅನಿವಾರ್ಯವಾಗಿದೆ ಎಂದರು.
ನಮ್ಮ ದೇಶದ ಯೋಗ ಪದ್ಧತಿಯನ್ನು ವಿಶ್ವದಾದ್ಯಂತ ವಿಸ್ತರಿಸಿದ ಕೀರ್ತಿ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು. ಇಂದು ಜನರು ದೈನಂದಿನ ಜೀವನದಲ್ಲಿ ಕೆಲಸ ಮತ್ತು ಹಣದ ಹಿಂದೆ ಬಿದ್ದಿದ್ದು, ಆ ಗಳಿಕೆಯನ್ನೆಲ್ಲ ಆರೋಗ್ಯಕ್ಕಾಗಿ ಆಸ್ಪತ್ರೆಗಳಿಗೆ ಖರ್ಚು ಮಾಡುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಕೆಲಸದ ಒತ್ತಡ ಹೆಚ್ಚಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಯೋಗ ಮತ್ತು ದೈಹಿಕ ಕಸರತ್ತುಗಳನ್ನು ಮಾಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿ ಪ್ರತಿದಿನ ಯೋಗಾಭ್ಯಾಸಕ್ಕಾಗಿ ಶಾಶ್ವತ ಜಾಗವನ್ನು ಗುರುತಿಸುವ ಕೆಲಸ ಮಾಡುವುದಾಗಿ ತಿಳಿಸಿದರು.ಯೋಗ ಚೇತನ ಟ್ರಸ್ಟ್ನ ಅಧ್ಯಕ್ಷ ಲಕ್ಷ್ಮೀ ರಂಗನಾಥ್ ಮಾತನಾಡಿ, ಕಳೆದ 20 ವರ್ಷಗಳಿಂದ ಟ್ರಸ್ಟ್ನಿಂದ ಎಲ್ಲರಿಗೂ ಉಚಿತವಾಗಿ ಯೋಗಾಭ್ಯಾಸ ಕಲಿಸಲಾಗುತ್ತಿದೆ. ಇದರ ಜೊತೆಗೆ ಪರಿಸರ ಮತ್ತು ಆರೋಗ್ಯ ಕಾಪಾಡುವಂತಹ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಹಾಲೆಬೆಲೂರಿನ ಕೆ. ವೆಂಕಟೇಶರವರನ್ನು ಸನ್ಮಾನಿಸಲಾಯಿತು. ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಕೃಷ್ಣಪ್ಪ, ಯೋಗ ಚೇತನ ಟ್ರಸ್ಟ್ನ ಜಗದೀಶ್, ಲಕ್ಷಣ ಕೀರ್ತಿ, ಬಸವರಾಜು, ಗೀತಾ ಮುಂತಾದವರು ಉಪಸ್ಥಿತರಿದ್ದರು.