ಜಾತಿ ಜನಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

| Published : Oct 23 2024, 01:50 AM IST

ಜಾತಿ ಜನಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರವು ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿರುವುದು ಸ್ವಾಗತಾರ್ಹ.

ಕನ್ನಡಪ್ರಭ ವಾರ್ತೆ ಮೈಸೂರು

ರಾಜ್ಯ ಸರ್ಕಾರವು ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.ಸರ್ಕಾರವು ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿರುವುದು ಸ್ವಾಗತಾರ್ಹ. ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ತೀವ್ರ ಅಸಮಾಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಅವರು ಖಂಡಿಸಿದರು.ರಾಜ್ಯದ ಜನಸಂಖ್ಯೆಯ ಬಹು ಭಾಗವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು ಅಲ್ಪಸಂಖ್ಯಾತ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿವೆ. ಆದರೆ, ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು. ಹೀಗಾಗಿ, ದುರ್ಬಲ ತಳ ಸಮುದಾಯಗಳ ಉನ್ನತಿಗಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.ಜಾತಿ ಜನಗಣತಿ ವರದಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಈಗಿರುವ ಶೇ.50 ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಮುಖಂಡರಾದ ಶಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು, ಬಿ.ಡಿ. ಶಿವಬುದ್ಧಿ, ಆರ್. ಸೋಮು, ರಾಜು, ಸೋಮಶೇಖರ್, ಕುಮಾರ್, ಮುತ್ತು, ನಾಗರಾಜು, ರಜನಿ, ದಾಸಯ್ಯ, ರಾಜಣ್ಣ, ತಿಮ್ಮೇಗೌಡ, ಶಿವು, ಕೃಷ್ಣ, ನಿಂಗರಾಜು ಮೊದಲಾದವರು ಇದ್ದರು.