ಸಾರಾಂಶ
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಉದ್ದೇಶದಿಂದ ರಾಜ್ಯಪಾಲರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಬಿಜೆಪಿ ಸರ್ಕಾರದಿಂದ ಒತ್ತಡ ಹಾಕಿಸಿದ್ದಾರೆ ಎಂದು ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕರ್ನಾಟಕದ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ರಾಜ್ಯಪಾಲರು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಘೋಷಣೆ ಕೂಗಿದರು.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಉದ್ದೇಶದಿಂದ ರಾಜ್ಯಪಾಲರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಬಿಜೆಪಿ ಸರ್ಕಾರದಿಂದ ಒತ್ತಡ ಹಾಕಿಸಿದ್ದಾರೆ ಎಂದು ಆರೋಪಿಸಿದರು.ರಾಜ್ಯಪಾಲರು ಸಾಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಜಾಪ್ರಭುತ್ವ ನಡೆಗೆ ಬೆಂಬಲ ನೀಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ೧೭-ಎ ಅಡಿ ಅನುಮತಿ ನೀಡುವ ವೇಳೆ ಪಾಲಿಸಬೇಕಾಗಿರುವ ನಿಯಮಗಳನ್ನು (ಎಸ್ಓಜಿ) ಉಲ್ಲಂಘಿಸಲಾಗಿದೆ. ೨೦೨೧ನೇ ಸೆಪ್ಟೆಂಬರ್ ೩ರಂದು ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನು ಪರಿಗಣಿಸಿಲ್ಲ ಎಂದು ಕಿಡಿಕಾರಿದರು.
ಸಮಿತಿಯ ಜಿಲ್ಲಾ ಸಂಚಾಲಕ ಎಂ.ವಿ. ಕೃಷ್ಣ, ಕೆ.ಜೆ. ಶಿವಕುಮೂರ್ತಿ, ಜಿ.ಆರ್. ರವಿ, ವೆಂಕಟೇಶ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.