ಸಾರಾಂಶ
- ಪ್ರವಾಸಿ ಮಂದಿರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಡಿ.ಎಸ್.ಎಸ್.ಸದಸ್ಯತ್ವ ನೋಂದಣಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರದಲಿತರು ಸಂಘಟಿತರಾದರೆ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎನ್.ವೆಂಕಟೇಶ್ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಡಿಎಸ್ಎಸ್ ನ ತಾಲೂಕು ಸಮಿತಿ ಏರ್ಪಡಿಸಿದ್ದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹಾತ್ಮಾ ಪ್ರೊ.ಬಿ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಹೋರಾಟ ಮಾಡಿ ಚಂದ್ರಗುತ್ತಿ ಜಾತ್ರೆಯಲ್ಲಿ ಮಹಿಳೆಯರ ಬೆತ್ತಲೆ ಸೇವೆ ನಿಲ್ಲಿಸಲಾಗಿತ್ತು ಎಂದು ಸ್ಮರಿಸಿದರು.ದಲಿತ ಸಂಘರ್ಷ ಸಮಿತಿ ರಾಜ್ಯ ಮಹಿಳಾ ಘಟಕದ ಸಂಚಾಲಕಿ ಎಂ.ವಿ.ಭವಾನಿ ಮಾತನಾಡಿ, ಮಹಿಳೆಯರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಶ್ರಮಿಸಬೇಕು. ಜೀವನದಲ್ಲಿ ಮುಂದೆ ಬರಬೇಕಾದರೆ ಶಿಕ್ಷಣ ಅತಿ ಅವಶ್ಯಕ. ದಲಿತರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡಿರಬೇಕು ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಮೃತ್ಯಂಜಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ವಿಚಾರವನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು. ಅವರು ಬರೆದ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಪಟ್ಟಣದ ಮೇದರ ಬೀದಿಯ ಪ್ರತಿಭಾವಂತ ವಿದ್ಯಾರ್ಥಿ ಸಾಗರ್ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗೌರವಿಸಲಾಯಿತು. ತಾಲೂಕಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೋಂದಣಿ ಜವಾಬ್ದಾರಿಯನ್ನು ಮುಖಂಡ ಅಬ್ದುಲ್ ರೆಹಮಾನ್ ಅವರಿಗೆ ವಹಿಸಲಾಯಿತು.
ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ರಾಜೇಶ್ ಅವರ ನೇತೃತ್ವದಲ್ಲಿ ತಾಲೂಕಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕು ಸಂಚಾಲಕರಾಗಿ ಸೀಜು ಎಂ.ಜೆ., ತಾಲೂಕು ಸಂಘಟನಾ ಸಂಚಾಲಕರಾಗಿ ಮುಳುವಳ್ಳಿ ಸಿದ್ದಪ್ಪ, ಹಿಳುವಳ್ಳಿ ರಾಜು, ರಾವೂರು ರವಿ, ಪ್ರಭು, ಕುಮಾರ್, ಎನ್.ಆರ್.ಪುರ ಕದೀರ್, ಕೆ.ಕಣಬೂರು ಉಮೇಶ್, ಮೇದರ ಬೀದಿ ಕಲ್ಲೇಶ್, ಖಜಾಂಚಿಯಾಗಿ ಮೃತ್ಯಂಜಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ತಾಲೂಕು ಸಂಚಾಲಕಿಯಾಗಿ ರಾವೂರು ವಸಂತಿ, ತಾಲೂಕು ಸಂಘಟನಾ ಸಂಚಾಲಕರಾಗಿ ಆರ್. ರೇಣುಕ, ಮಂಗಳ,ಎಲ್.ರೇಣುಕಾ,ಯಲ್ಲಮ್ಮ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ದಲಿತರ ಸಮಸ್ಯೆಗಳ ಬಗ್ಗೆ ಹಾಗೂ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.