ತಾಲ್ಲೂಕಿನ ಬಗದಲ್ ಗ್ರಾಮದ ಸರ್ವೇ ನಂ. 8 ರಲ್ಲಿ ದಲಿತ ಸಮುದಾಯದ ಸ್ಮಶಾನ ಭೂಮಿಯನ್ನು ಅಧಿಕೃತವಾಗಿ ಮಂಜೂರು ಮಾಡಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿ ನಾಡ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ತಾಲ್ಲೂಕಿನ ಬಗದಲ್ ಗ್ರಾಮದ ಸರ್ವೇ ನಂ. 8 ರಲ್ಲಿ ದಲಿತ ಸಮುದಾಯದ ಸ್ಮಶಾನ ಭೂಮಿಯನ್ನು ಅಧಿಕೃತವಾಗಿ ಮಂಜೂರು ಮಾಡಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿ ನಾಡ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ಗ್ರಾಮದ ಸರ್ವೇ ನಂ. 8ರಲ್ಲಿ ಒಟ್ಟು 3 ಎಕರೆ 36 ಗುಂಟೆ ಜಮೀನು ಇದ್ದು, ಅದರಲ್ಲಿ 36 ಗುಂಟೆ ಪೋಟಖರಾಬ್ ಭೂಮಿಯಲ್ಲಿ ದಲಿತರು ತಲೆತಲಾಂತರಗಳಿಂದ ಅಂತ್ಯಸಂಸ್ಕಾರಗಳನ್ನು ನೆರವೇರಿಸುತ್ತಾ ಬಂದಿದ್ದಾರೆ. ಆದರೆ, ಕಳೆದ ನವೆಂಬರ್ 26 ರಂದು ಗ್ರಾಮದ ಸವರ್ಣೀಯ ಸಮುದಾಯದ ಕೆಲವರು ಜೆಸಿಬಿ ಯಂತ್ರ ಬಳಸಿ ಸ್ಮಶಾನ ಭೂಮಿಯನ್ನು ಧ್ವಂಸಗೊಳಿಸಲು ಯತ್ನಿಸಿದ ಘಟನೆ ನಡೆದಿದ್ದು, ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಸಂಬಂಧಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ ಅವರು ಇದರಿಂದ ದಲಿತರು ಹಾಗೂ ಸವರ್ಣೀಯರ ಮಧ್ಯೆ ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.ಸದರಿ 36 ಗುಂಟೆ ಪೋಟಖರಾವ್ ಭೂಮಿಯನ್ನು ದಲಿತರ ಹೆಸರಿಗೆ ಹಕ್ಕು ಬದಲಾವಣೆ ಮಾಡಬೇಕು, ಸ್ಮಶಾನದ ಸುತ್ತ ತಡೆಗೋಡೆ ನಿರ್ಮಿಸಬೇಕು ಹಾಗೂ ನೀರಿನ ವ್ಯವಸ್ಥೆಗಾಗಿ ಕೊಳವೆ ಬಾವಿ ಕೊರೆಸಬೇಕು ಎಂದು ಆಗ್ರಹಿಸಿದರು.
ಈ ಬೇಡಿಕೆಗಳನ್ನು 15 ದಿನಗಳೊಳಗೆ ಈಡೇರಿಸದಿದ್ದಲ್ಲಿ ತಹಸೀಲ್ದಾರ್ ಕಚೇರಿ ಎದುರು ಹಂತ ಹಂತವಾಗಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಈ ಸಂದರ್ಭದಲ್ಲಿ ಮಾಜಿ ತಾಪಂ ಸದಸ್ಯ ರಾಜಕುಮಾರ ಬಗದಲಕರ್, ಮಾದಿಗ ದಂಡೊರಾ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ ಎಸ್. ಹಾಲಹಳ್ಳಿಕರ್, ಸಿದ್ರಾಮ ಬಗದಲಕರ್, ಪ್ರಭು ಕರನಾಯಕ, ಪಂಡಿತ ಕರನಾಯಕ, ಕಾಳಪ್ಪಾ ಚಿಮ್ಮಾ ಸೇರಿದಂತೆ ಗ್ರಾಮದ ಅನೇಕ ದಲಿತ ಮುಖಂಡರು ಉಪಸ್ಥಿತರಿದ್ದರು.