ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುನೃತ್ಯ, ಕಲೆ, ಸಾಹಿತ್ಯ ಮತ್ತು ಸಂಗೀತವು ಅತ್ಯಂತ ಪ್ರಭಾವಶಾಲಿ ಮಾಧ್ಯಮಗಳಾಗಿವೆ. ಸಮಾಜದಲ್ಲಿ ಗಂಭೀರವಾದ ಪರಿಣಾಮ ಬೀರುವಂತಹ ಶಕ್ತಿಯುತವಾದ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.ನಗರದ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಕಲಾ ತರಬೇತಿ- 2025 ಕಾರ್ಯಕ್ರಮನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.ಈ ಕಲೆಯು ಸ್ವಾಭಾವಿಕವಾಗಿ ಶೋಷಿತ ಸಮುದಾಯಗಳಿಗೆ ಬಂದಿದ್ದು, ಅದನ್ನು ಪ್ರೋತ್ಸಾಹಿಸಿ ವೇದಿಕೆ ಕಲ್ಪಿಸಿಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಮಕ್ಕಳಿಗೆ ಇದೇ ಮೊದಲ ಬಾರಿಗೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಹಾಗೂ ಜಾನಪದ ಸಂಗೀತ ಕಲಾ ಪ್ರಕಾರಗಳನ್ನು ಆರು ತಿಂಗಳ, ವಾರದಲ್ಲಿ ಮೂರು ದಿನ ಎರಡು ಗಂಟೆಗಳು ಕಲಿಸುವ ಕಾರ್ಯಕ್ರಮದ ಇದಾಗಿದೆ ಎಂದು ಅವರು ಹೇಳಿದರು.ಮಕ್ಕಳನ್ನು ಸಾಂಸ್ಕೃತಿಕವಾಗಿ ಗಟ್ಟಿಗೊಳಿಸಿ ಸಮಾಜದಲ್ಲಿ ಪರಿಣಾಮ ಬೀರುವ ಸಾಂಸ್ಕೃತಿಕ ನಾಯಕತ್ವ ಬೆಳೆಯಲು ಈ ಕಾರ್ಯಕ್ರಮ ಪೂರಕವಾಗಿದೆ. ಎಲ್ಲಾ ರಂಗದಲ್ಲೂ ನಮ್ಮ ಮಕ್ಕಳು ಪರಿಣಿತಿ ಹೊಂದಲು ಈ ಯೋಜನೆ ಸಹಕಾರಿಯಾಗಿದೆ. ಹೀಗಾಗಿ, ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬೇಕು ಎಂದರು.ಸರ್ಕಾರವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹೆಚ್ಚಿನ ರೀತಿಯ ಅನುದಾನವನ್ನು ಬಿಡುಗಡೆ ಮಾಡಿದ್ದು, ಸರ್ಕಾರದ ಅಧೀನದಲ್ಲಿರುವ 35 ಹೆಚ್ಚಿನ ಇಲಾಖೆಗಳ ಮೂಲಕ ವಿವಿಧ ಯೋಜನೆಗಳನ್ನು ಆಯೋಜಿಸಿ ಪ್ರೋತ್ಸಾಹವನ್ನು ನೀಡುತ್ತಿದೆ ಎಂದರು.ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದಿರುವ ಬುದ್ದ ಮತ್ತು ಆತನ ದಮ್ಮ ಪುಸ್ತಕವನ್ನು ಕನ್ನಡಕ್ಕೆ ತರ್ಜುಮೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮುಂದಾಗಿರುವುದು ಮಹತ್ವದ ಕಾರ್ಯ ಎಂದು ಅವರು ಶ್ಲಾಘಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಮಾತಾನಡಿ, ಕಲಾ ತರಬೇತಿ ಪರಿಕಲ್ಪನೆ ವಿವರಿಸಿದಾಗ ಸಚಿವರು ಕೂಡಲೇ ಅನುದಾನ ಒದಗಿಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಲದ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಬಾರದು ಹಾಗೂ ಅವರಲ್ಲಿರುವ ಪ್ರತಿಭೆ ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಕೆ.ಎಂ. ಮಲ್ಲೇಶ್, ನಿಲಯಪಾಲಕರಾದ ಸಿ.ಆರ್. ಗುರುಪ್ರಸಾದ್, ಸರಸ್ವತಿ, ತರಬೇತುದಾರದ ದೇವಾನಂದ ವರಪ್ರಸಾದ್, ನಾರಾಯಣಸ್ವಾಮಿ ಮೊದಲಾದವರು ಇದ್ದರು.