ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ರೂಪಿಸಿ ಜಾಗತಿಕ ಮಟ್ಟದಲ್ಲಿ ಅನಧಿಕೃತ ಅಪಪ್ರಚಾರ ಹಾಗೂ ವದಂತಿಗಳನ್ನು ಪಸರಿಸಿ ಕಳಂಕವನ್ನುಂಟು ಮಾಡಿದ ಪ್ರಕರಣವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದೆ. ಶುಕ್ರವಾರ ಕೋರ್ ಕಮಿಟಿಯ ಏಳು ಮಂದಿ ಸದಸ್ಯರು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ಪತ್ರ ಅರ್ಪಿಸಿದರು.ಮಹಾಸಭಾದ ಮುಖ್ಯಸ್ಥ ಡಾ. ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಬಂದ ಸದಸ್ಯರು ಜೂ.27 ಮತ್ತು 28ರಂದು ಕಲಬುರಗಿಯಲ್ಲಿ ನಡೆದ ಚಿಂತನಾ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಧರ್ಮಸ್ಥಳದ ಕಳಂಕ ನಿವಾರಿಸಿ ಪಾವಿತ್ರ್ಯ ರಕ್ಷಣೆಗೆ ತಮ್ಮ ಪೂರ್ಣ ಬೆಂಬಲ ನೀಡುವ ಬಗ್ಗೆ ಪತ್ರವನ್ನು ಹೆಗ್ಗಡೆ ಅವರಿಗೆ ಅರ್ಪಿಸಿದರು.ಷಡ್ಯಂತ್ರ ರೂಪಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸದ್ಯದಲ್ಲೇ ರಾಜ್ಯದ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಾಯಿಸುವುದಾಗಿ ಸ್ವಾಮೀಜಿ ತಿಳಿಸಿದರು.

ಸುಮಾರು 200 ಮಂದಿ ಸ್ವಾಮೀಜಿಗಳ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಬಂದು ಭಕ್ತರ ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಡಾ. ಹೆಗ್ಗಡೆಯ ಅರಲ್ಲಿಯೂ ಪ್ರಸ್ತಾಪಿಸಿದ್ದು ಮುಂದೆ ಸೂಕ್ತ ಸಿದ್ಧತೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಹೆಗ್ಗಡೆ ಅವರನ್ನು ಮಹಾಸಭಾ ವತಿಯಿಂದ ಗೌರವಿಸಲಾಯಿತು.