ಭಾರತೀಯ ರಿಸರ್ವ್ ಬ್ಯಾಂಕ್ ಬೆಂಬಲದೊಂದಿಗೆ ವಿದ್ಯಾನಿಧಿ ನೂತನ ಬ್ಲಾಕ್‌ನಲ್ಲಿ ಮಂಗಳವಾರದಿಂದ ಹಮ್ಮಿಕೊಂಡಿರುವ ಐದು ದಿನಗಳ ‘ಹಣಕಾಸು ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ ಉದ್ಘಾಟನೆ

ಕನ್ನಡಪ್ರಭ ವಾರ್ತೆ ತುಮಕೂರುಇಂದಿನ ಹಣಕಾಸು ವಲಯವು ಅತ್ಯಂತ ಕ್ರಿಯಾತ್ಮಕವಾಗಿದ್ದು, ಸಂಪೂರ್ಣವಾಗಿ ದತ್ತಾಂಶ ಆಧಾರಿತವಾಗಿದೆ. ಇಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ದತ್ತಾಂಶಗಳನ್ನು ಸರಿಯಾಗಿ ವಿಶ್ಲೇಷಿಸುವ ಕಲೆ ಎಂಬಿಎ ವಿದ್ಯಾರ್ಥಿಗಳಿಗೆ ಸಿದ್ಧಿಸಿರಬೇಕು ಎಂದು ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಅಭಿಪ್ರಾಯಪಟ್ಟರು.ನಗರದ ವೈಸಿರಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗವು ಭಾರತೀಯ ರಿಸರ್ವ್ ಬ್ಯಾಂಕ್ ಬೆಂಬಲದೊಂದಿಗೆ ವಿದ್ಯಾನಿಧಿ ನೂತನ ಬ್ಲಾಕ್‌ನಲ್ಲಿ ಮಂಗಳವಾರದಿಂದ ಹಮ್ಮಿಕೊಂಡಿರುವ ಐದು ದಿನಗಳ ‘ಹಣಕಾಸು ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಣಕಾಸು ಕ್ಷೇತ್ರದಲ್ಲಿ ಪ್ರತಿನಿತ್ಯ ಆಗಾಧವಾದ ಬದಲಾವಣೆಗಳಾಗುತ್ತಿವೆ. ವಿದ್ಯಾರ್ಥಿಗಳು ಕೇವಲ ಮಾಹಿತಿಯನ್ನು ಸಂಗ್ರಹಿಸುವುದಷ್ಟೇ ಅಲ್ಲದೆ, ಅದನ್ನು ಸಮರ್ಪಕವಾಗಿ ವಿಶ್ಲೇಷಿಸಿ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಬುದ್ಧತೆ ತೋರಬೇಕು. ಯಾವುದೇ ಕೆಲಸ ಮಾಡುವಾಗ ಅದರಲ್ಲಿ ಪರಿಪೂರ್ಣತೆ ಇರಲಿ. ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು, ವೃತ್ತಿಪರತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಬೆಂಗಳೂರಿನ ಸಿಬಿಎ ಅಸೋಸಿಯೇಟ್ ಡೈರೆಕ್ಟರ್ ಸುನಿಲ್ ಆರ್. ಜಿ. ಅವರು ಜಾಗತಿಕ ಮಟ್ಟದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿವರಿಸುತ್ತಾ, ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ‘ರಿಸ್ಕ್ ಮ್ಯಾನೇಜ್‌ಮೆಂಟ್’ ಕ್ಷೇತ್ರವು ಬೃಹತ್ ಆಗಿ ಬೆಳೆದಿದೆ. ಈ ವಲಯದಲ್ಲಿ ಅದ್ಭುತ ಉದ್ಯೋಗಾವಕಾಶಗಳಿವೆ. ಆದರೆ ಈ ಅವಕಾಶಗಳನ್ನು ಪಡೆಯಲು ವಿದ್ಯಾರ್ಥಿಗಳು ಹಣಕಾಸಿನ ವಿಶಿಷ್ಟ ಕ್ಷೇತ್ರಗಳಲ್ಲಿ ಹೆಚ್ಚಿನ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು. ಕಂಪನಿಗಳು ಇಂದು ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಣಕಾಸು ದತ್ತಾಂಶಗಳು ಎಷ್ಟು ನಿರ್ಣಾಯಕವಾಗುತ್ತವೆ ಎಂಬುದನ್ನು ನೈಜ ಉದಾಹರಣೆಗಳ ಮೂಲಕ ವಿವರಿಸಿದ ಅವರು, ತಂತ್ರಜ್ಞಾನದ ಅರಿವಿರುವ ಹಣಕಾಸು ತಜ್ಞರಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ ಎಂದರು.ಎಂಬಿಎ ವಿಭಾಗದ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಟಿ.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಐದು ದಿನಗಳ ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕೇವಲ ಸೈದ್ಧಾಂತಿಕ ಜ್ಞಾನವನ್ನಷ್ಟೇ ಅಲ್ಲದೆ, ಮಾರುಕಟ್ಟೆಯ ಪ್ರಾಯೋಗಿಕ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಲಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.