ಕನ್ನಡಪ್ರಭ ವಾರ್ತೆ ತುರುವೇಕೆರೆ

ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಕೆಲವಡೆ ತಲೆದೋರಿದ್ದರಿಂದ ತಾಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಂಗಳವಾರ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ತಾಲೂಕಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜಿಲ್ಲಾಧಿಕಾರಿ ತಾಲೂಕಿನ ಕಸಬಾ ಹೋಬಳಿಯ ತಾಳೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಕಲ್ಕೆರೆ ಮತ್ತು ಡೊಂಕಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಅವರು ಕುಡಿಯುವ ನೀರಿಗಾಗಿ ಸ್ಥಳೀಯ ಖಾಸಗಿ ಬೋರ್ವೆಲ್ನಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುತ್ತಿರುವ ಕುರಿತು ಮಾಹಿತಿ ಪಡೆದರು. ಗ್ರಾಮದಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೊಸದಾಗಿ ಕೊಳವೆಬಾವಿ ಕೊರೆದು ಅಲ್ಲಿನ ನೀರಿನ ಗುಣಮಟ್ಟ ಪರಿಶೀಲಿಸಿ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಅಗತ್ಯ ಮೂಲಸೌಕರ್ಯಗಳನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ‌ ತಾಲೂಕಿನಲ್ಲಿ ಎಸ್.ಐ.ಆರ್ ಪ್ರಗತಿಯ ಬಗ್ಗೆ ತಹಸೀಲ್ದಾರ್ ಎನ್.ಎ. ಕುಂಞ ಅಹಮದ್ ಅವರ ಬಳಿ ಮಾಹಿತಿ ಪಡೆದು ಶೀಘ್ರವೇ ಎಸ್.ಐ.ಆರ್ ಪ್ರಕ್ರಿಯೆನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಸಪ್ತಶ್ರೀ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಅಬ್ದುಲ್ ಹಾಷಂ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಪೂಜಾ ಇದ್ದರು.