ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಡೀಸಿ ಸೂಚನೆ

| Published : Oct 17 2024, 12:02 AM IST / Updated: Oct 17 2024, 12:03 AM IST

ಸಾರಾಂಶ

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ‘ಜಿಲ್ಲಾಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ’ಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರತಿಯೊಬ್ಬ ವಿದ್ಯಾರ್ಥಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು, ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ನಡೆದ ‘ಜಿಲ್ಲಾಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಕ್ಷೇತ್ರದಲ್ಲಿಯೂ ಒತ್ತಡ ಇರುವಂತೆ ಶಿಕ್ಷಣ ಕ್ಷೇತ್ರದಲ್ಲಿಯೂ ಒತ್ತಡದ ಪರಿಸ್ಥಿತಿ ಇದೆ. ತಂದೆ ಅಥವಾ ತಾಯಿ ಇಲ್ಲದ (ಸಿಂಗಲ್ ಪೇರೆಂಟ್) ಮಕ್ಕಳು, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಸಾಮಾಜಿಕ ಸಮಸ್ಯೆ, ಕಲಿಕೆಗೆ ಅವಶ್ಯವಾದ ಮೂಲಸೌಲಭ್ಯಗಳಿಲ್ಲದಿರುವುದು ಸೇರಿದಂತೆ ಇತರೆ ಕಾರಣಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಲಿದೆ. ಈ ಎಲ್ಲಾ ಸಮಸ್ಯೆಗಳನ್ನು ಮೀರಿ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ಶಿಕ್ಷಕರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪೋಷಕರನ್ನು ಸಹ ಪ್ರೇರೇಪಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ-1, 2 ಮತ್ತು 3ರ ಪರೀಕ್ಷೆಗಳಲ್ಲಿ ಚಾಮರಾಜನಗರ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿನ ಫಲಿತಾಂಶ ತೃಪ್ತಿಕರವಾಗಿದೆ. ಜಿಲ್ಲಾ ಕೇಂದ್ರವಾಗಿರುವ ಚಾಮರಾಜನಗರ ಫಲಿತಾಂಶದಲ್ಲಿ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಇದು ಬದಲಾಗಬೇಕು. ಪೋಷಕರ ಸಹಕಾರ ಹಾಗೂ ಮಕ್ಕಳ ಬುದ್ಧಿಶಕ್ತಿಯ ರಚನೆ ವಿಶ್ಲೇಷಣೆಯಾಗಬೇಕು. ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಪ್ರತಿ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸಿ ಶಿಕ್ಷಕರು ಪರಿಶೀಲಿಸಬೇಕು. ಎಲ್ಲಿ, ಏನು ಕೊರತೆಯಾಗಿದೆ ಎಂಬುದು ಅಲ್ಲಿ ಅರಿವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಆಧಿಕಾರಿಗಳು ಮುಂದಾಗುವಂತೆ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಮಕ್ಕಳ ಕಲಿಕಾ ಸುಧಾರಣೆಗೆ ಅಗತ್ಯವಿರುವ ಮೂಲಸೌಲಭ್ಯಗಳು, ವಸತಿ ವ್ಯವಸ್ಥೆ, ಕಲಿಕಾ ವಾತಾವರಣ, ಪ್ರಶ್ನೆಪತ್ರಿಕೆಗಳ ಬ್ಲೂ ಪ್ರಿಂಟ್ ಒದಗಿಸಲು ಆದ್ಯತೆ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳ ವಸತಿ ಶಾಲೆಗಳಿಗೆ ಆಯಾ ಇಲಾಖೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಕಲಿಕಾ ಹಿನ್ನಡೆ ಕಂಡುಬಂದಿರುವ ಮಕ್ಕಳು, ಶಿಕ್ಷಕರು, ಪೋಷಕರೊಂದಿಗೆ ಸಂವಾದ ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಪ್ರೇರೇಪಿಸಲಾಗುವುದು. ಒಟ್ಟಾರೆ ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಶಿಕ್ಷಣ ಇಲಾಖೆ ಕೈಗೊಳ್ಳುವ ಸುಧಾರಣಾ ಕ್ರಮಗಳಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಜಿಪಂ ಸಿಇಒ ಮೋನಾ ರೋತ್ ಮಾತನಾಡಿ, ಫಲಿತಾಂಶದಲ್ಲಿ ಹಿನ್ನಡೆಯಾಗಿರುವ ಶಾಲೆಗಳಲ್ಲಿ ಮುಖ್ಯವಾಗಿ ಯಾವ ವಿಷಯಗಳ ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿದಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಇಲಾಖೆ ಅಳವಡಿಸಿಕೊಂಡಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಉತ್ತಮ ಫಲಿತಾಂಶ ನೀಡುವಂತೆ ಪ್ರೇರೇಪಿಸಬೇಕು. ಶಾಲೆಗೆ ಗೈರು ಹಾಜರಿ, ಸರಾಸರಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪೋಷಕರಿಗೆ ಅರಿವು ಮೂಡಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಡೀಸಿ ಹಾಗೂ ಜಿಪಂ ಅಧಿಕಾರಿಗಳು ಶೈಕ್ಷಣಿಕ ವರ್ಷ ಆರಂಭದಿಂದಲೂ ಬಹಳ ಆಸಕ್ತಿ ವಹಿಸಿ ಮಕ್ಕಳ ಕಲಿಕಾ ವೃದ್ಧಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಜಿಲ್ಲೆಯು ಅಳವಡಿಸಿಕೊಂಡಿರುವ 14 ಹಾಗೂ 20 ಅಂಶಗಳ ಕಾರ್ಯಕ್ರಮಗಳ ಅಂಶಗಳನ್ನು ಜಿಲ್ಲಾಧಿಕಾರಿ ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಕುಂದುಕೊರತೆ ಪರಿಹರಿಸಲು ಮುಂದಾಗಿದ್ದಾರೆ. ಕಳೆದ ಬಾರಿಯ ನ್ಯೂನತೆಗಳನ್ನು ಸರಿಪಡಿಸಿಕೊಂಡು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ನೀಡಲು ಎಲ್ಲರ ಪರಿಶ್ರಮ ಅವಶ್ಯವಾಗಿದೆ ಎಂದರು.

ಈ ವೇಳೆ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಜಿಲ್ಲೆಯ 9 ಶಾಲೆಗಳ ಮುಖ್ಯ ಶಿಕ್ಷಕರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಡಯಟ್ ಪ್ರಾಂಶುಪಾಲ ಕಾಶೀನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಶೆಟ್ಟಿ, ಟಿ.ಆರ್. ಸ್ವಾಮಿ, ಮಂಜುಳ, ಗುರುಲಿಂಗಯ್ಯ, ಯಳಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಂಜುಂಡಯ್ಯ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.