ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುನಗರದಲ್ಲಿ ಲೋಕಾರ್ಪಣೆಗೊಂಡ ಡಿ. ದೇವರಾಜ ಅರಸು ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಹಾಗೂ ನಿಲ್ದಾಣದ ಹೊರಭಾಗದಲ್ಲಿರುವ ಆಟೋ ಚಾಲಕರ ಪಾರ್ಕಿಂಗ್ ಸಮಸ್ಯೆಗಳನ್ನು ಆಲಿಸಿದರು. ಪ್ರಯಾಣಿಕರು ತಮ್ಮ ದೂರುಗಳನ್ನು ದಾಖಲಿಸಲು ದೂರು ವಹಿಯನ್ನು ನಿರ್ವಹಣೆ ಮಾಡಬೇಕು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚಿಸಿದರಲ್ಲದೆ, ಶೀಘ್ರವೇ ನಿಲ್ದಾಣದ ಮುಂಭಾಗ ಆಟೋ ನಿಲ್ದಾಣಕ್ಕೆ ವ್ಯವಸ್ಥೆ ಮಾಡಬೇಕೆಂದು ಕೆಎಸ್ಆರ್ಟಿಸಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತ್ರಿವೇಣಿಗೆ ನಿರ್ದೇಶನ ನೀಡಿದರು. ನಿಲ್ದಾಣದ ಕೆಳ ಹಾಗೂ ಮೇಲಂತಸ್ತಿನ ಮಹಡಿಗಳನ್ನು ಪರಿಶೀಲಿಸಿದ ಅವರು, ತ್ರಿವೇಣಿ ಅವರು ಬಾಕಿ ಇರುವ ಸಣ್ಣ ಪುಟ್ಟ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಲಿಫ್ಟ್ ಕಾರ್ಯಾಚರಣೆ, ಶೌಚಾಲಯ, ವಿದ್ಯುತ್ ಸಂಪರ್ಕ, ಸೈನ್ ಬೋರ್ಡ್, ಸಿಸಿಟಿವಿ ಕ್ಯಾಮೆರಾ, ಪ್ರಯಾಣಿಕರ ಮಾಹಿತಿಗಾಗಿ ಟಿವಿ ಅಳವಡಿಕೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಪೊಲೀಸ್ ಚೌಕಿಯಲ್ಲಿ ಮೂಲ ಸೌಕರ್ಯಗಳನ್ನು ಕೂಡಲೇ ಒದಗಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಮಂಜುನಾಥ್, ಬಸ್ ನಿಲ್ದಾಣದ ಮೇಲ್ವಿಚಾರಕ ಬಿ.ಆರ್. ನಾಗರಾಜು, ಟಿಸಿ ಮಹಮದ್ ರಫೀಕ್, ನರೇಂದ್ರ ಬಾಬು ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಇದ್ದರು.