ಕಚೇರಿಯ ಖಾಲಿ ಕುರ್ಚಿಗಳನ್ನು ಕಂಡ ಡಿಸಿ, ಕರ್ತವ್ಯ ಲೋಪವೆಸಗಿದ ಹಾಗೂ ಅನಧಿಕೃತವಾಗಿ ಗೈರಾದ ಸಿಬ್ಬಂದಿಗೆ ತಕ್ಷಣವೇ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಮೇಲಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಸಿಎಂ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆ ರಾಜ್ಯಾದ್ಯಂತ ಸರ್ಕಾರಿ ನೌಕರರು ಕಡ್ಡಾಯವಾಗಿ ಕರ್ತವ್ಯ ಆಪ್ ಬಳಸಬೇಕೆಂಬ ಆದೇಶದ ಬೆನ್ನಲ್ಲೇ, ಜಿಲ್ಲಾಧಿಕಾರಿ ಡಾ. ರವಿ ಅವರು ಜಿಲ್ಲಾಡಳಿತ ಭವನದಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕಚೇರಿಗಳಲ್ಲಿನ ಅವ್ಯವಸ್ಥೆ ಹಾಗೂ ಸಿಬ್ಬಂದಿ ಗೈರುಹಾಜರಿ ಕಂಡು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿ ಖಾದಿ ಗ್ರಾಮೋದ್ಯೋಗ ಮಂಡಳಿ, ಚುನಾವಣಾ ಶಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ. ಕೈಮಗ್ಗ ಮತ್ತು ಜವಳಿ ಇಲಾಖೆ, ಕಾರ್ಮಿಕ ಸೇರಿ ಇತರ ಇಲಾಖೆಗಳ ಪ್ರಮುಖ ವಿಭಾಗಗಳಿಗೆ ದಿಢೀರ್ ಭೇಟಿ ನೀಡಿದರು. ಬೆಳಿಗ್ಗೆ ೧೦.೪೫ ಆದರೂ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿರುವುದು ಕಂಡುಬಂತು. ಕಚೇರಿಯ ಖಾಲಿ ಕುರ್ಚಿಗಳನ್ನು ಕಂಡ ಡಿಸಿ, ಕರ್ತವ್ಯ ಲೋಪವೆಸಗಿದ ಹಾಗೂ ಅನಧಿಕೃತವಾಗಿ ಗೈರಾದ ಸಿಬ್ಬಂದಿಗೆ ತಕ್ಷಣವೇ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಮೇಲಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.

ನಿಗಮ ಮಂಡಳಿಗಳ ಕಾರ್ಯವೈಖರಿ ತಪಾಸಣೆ ಮಾಡಿದ ಡಾ.ರವಿ, ರಿಕವರಿ ಅಧಿಕಾರಿಗಳಿಗೆ ನೇರ ಎಚ್ಚರಿಕೆ ರವಾನಿಸಿದರು. ಇದು ಸರ್ಕಾರದ ಯೋಜನೆಗಳೇ ಹೊರತು ಬ್ಯಾಂಕ್ ಯೋಜನೆಗಳಲ್ಲ. ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಹಾಗೂ ಜನಪರವಾಗಿ ಅನುಷ್ಠಾನಗೊಳಿಸಲೇಬೇಕು ಎಂದು ತಾಕೀತು ಮಾಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಜಾಲತಾಣಗಳಲ್ಲಿ ನಿಗಮದ ಮಾಹಿತಿಗಳು ಹಾಗೂ ಯೋಜನೆಗಳ ವಿವರಗಳನ್ನು ತ್ವರಿತವಾಗಿ ಅಪ್‌ಡೇಟ್ ಮಾಡುವಂತೆ ಸೂಚಿಸಿದರು.

ಭ್ರಷ್ಟಾಚಾರ ಸಹಿಸಲ್ಲ:

ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಿರುವ ಹಾಗೂ ಲಂಚದ ಬೇಡಿಕೆ ಇಡುತ್ತಿರುವ ಬಗ್ಗೆ ಕೇಳಿಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ಆಡಳಿತದಲ್ಲಿ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗುಡುಗಿದರು.

ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರುವ ಉದ್ದೇಶದಿಂದ, ಡಿಸಿ ಕಚೇರಿಯ ಮುಂಭಾಗದಲ್ಲಿ ಡಿಜಿಟಲ್ ಡಿಸ್ಪ್ಲೇ ಬೋರ್ಡ್ ಅಳವಡಿಸಲು ನಿರ್ದೇಶನ ನೀಡಿದರು. ಈ ನಾಮಫಲಕದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಿಬ್ಬಂದಿಯ ವಿವರ ಹಾಗೂ ಭ್ರಷ್ಠಾಚಾರ ವಿರೋಧಿ ಸಂದೇಶಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಡಿಸಿ ಎಸ್.ಎಂ.ಮಂಗಳ ಇದ್ದರು.

----

ಕೋಲಾರ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಡಿಸಿ ಡಾ.ರವಿ ದಿಢೀರ್ ಭೇಟಿ.