ಸಾರಾಂಶ
ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್ಆರ್ ಕನ್ಸ್ಟ್ರಕ್ಷನ್ನ ಎಂಜಿನಿಯರ್ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಸಂಜೆ ಬಿ.ಸಿ. ರೋಡ್ನಿಂದ ಅಡ್ಡಹೊಳೆ ವರಗೆ ನಡೆಯುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಮಾಣಿಯಿಂದ ಬಿ.ಸಿ.ರೋಡ್ ಭಾಗದ ತನಕ ಪರಿಶೀಲನೆ ನಡೆಸಿದರು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಮಾರ್ಚ್ ಅಂತ್ಯದೊಳಗೆ ಶೇ.95ರಷ್ಟು ಕಾಮಗಾರಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ಕಾಮಗಾರಿ ಪೂರ್ಣವಾಗಲಿದೆ. ನರಹರಿ ಪರ್ವತ ಸಮೀಪದ ಹಾಗೂ ಕೆಲ ಭಾಗಗಳನ್ನು ಹೊರತುಪಡಿಸಿದರೆ, ಉಳಿದವುಗಳೆಲ್ಲವೂ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ತಾನು ಕಚೇರಿಯಲ್ಲಿ ಅಧಿಕಾರಿಗಳಿಂದ ಕಾಮಗಾರಿಯ ಪ್ರಗತಿಯ ಕುರಿತು ಮಾಹಿತಿಯನ್ನು ಪಡೆಯುತ್ತಿದ್ದು, ಇದೀಗ ಸ್ಥಳಪರಿಶೀಲನೆ ನಡೆಸಿದ್ದಾಗಿ ಹೇಳಿದರು. ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್ಆರ್ ಕನ್ಸ್ಟ್ರಕ್ಷನ್ನ ಎಂಜಿನಿಯರ್ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ಕಂದಾಯ ನಿರೀಕ್ಷಕ ಜೆ. ಜನಾರ್ದನ ಮತ್ತು ವಿಜಯ ಆರ್., ಪ್ರಾಜೆಕ್ಟ್ ಮ್ಯಾನೇಜರ್ ಮಹೇಂದ್ರ ಸಿಂಗ್, ಟ್ರಾಫಿಕ್ ಎಸ್.ಐ. ಸುತೇಶ್ ಈ ಸಂದರ್ಭ ಉಪಸ್ಥಿತರಿದ್ದು, ಮಾಹಿತಿ ನೀಡಿದರು.