ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಾದ್ಯಂತ ಫೆ.28 ರಿಂದ ಆರಂಭವಾಗಲಿರುವ ಪಿಯುಸಿ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ನಗರದ ವಿವಿಧ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಮೂಲಕ ಶುಭ ಹಾರೈಸಿದರು.ನವನಗರದ ಅಲ್ಪಸಂಖ್ಯಾತರ ಎಂಡಿಆರ್ಎಸ್ ಮತ್ತು ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜ್ ಮತ್ತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆಗೆ ಆತ್ಮೀಯವಾಗಿ ಮಾತನಾಡಿದ ಜಿಲ್ಲಾಧಿಕಾರಿಗಳು ಪರೀಕ್ಷೆ ಜೀವನದ ಒಂದು ಭಾಗ ಮಾತ್ರ. ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ತಿಳಿಸಿದರು.
ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದಕ್ಕಿಂತ ಧೈರ್ಯ ತುಂಬುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ಕಾಟಾಚಾರಕ್ಕೆ ಓದದೇ ಇಷ್ಟಪಟ್ಟು ಅಬ್ಯಾಸ ಮಾಡಬೇಕು. ನಿಮ್ಮ ಈಗಿನ ಶ್ರಮ ಮುಂದಿನ ಗುರಿ ಸಾಧನೆಗೆ ಅನುಕೂಲವಾಗಲಿದೆ. ಉತ್ತಮವಾದ ಗುರಿ ಇಟ್ಟುಕೊಂಡು ಅದಕ್ಕೆ ತಕ್ಕಂತೆ ಶ್ರಮ ಕೂಡ ಅಂದರೆ ಅಭ್ಯಾಸ ಇರಬೇಕು. ಧೈರ್ಯ, ಶಿಸ್ತು ಹಾಗೂ ಸಮಯ ಪಾಲನೆ ಇವೆ ಯಶಸ್ಸಿನ ಮಂತ್ರಗಳಾಗಿದೆ ಎಂದು ತಿಳಿಸಿದರು.ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತದಿಂದ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ರೆಗ್ಯೂಲರ್ 24353, ಪುನರಾವರ್ತಿತ 1753 ಹಾಗೂ ಬಾಹ್ಯ 903 ಸೇರಿ ಒಟ್ಟು 27009 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 8992, ವಾಣಿಜ್ಯ ವಿಭಾಗದಲ್ಲಿ 5171 ಹಾಗೂ ವಿಜ್ಞಾನ ವಿಭಾಗದಲ್ಲಿ 10190 ವಿದ್ಯಾರ್ಥಿಗಳು ಇದ್ದಾರೆ. ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 8 ಜನರ ತಂಡವನ್ನು ಪರೀಕ್ಷಾ ಕಾರ್ಯ ಚಟುವಟಿಕೆಗೆ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದಲ್ಲಿ ಸೆಕ್ಷನ್ 163 ಜಾರಿಯಲ್ಲಿದ್ದು, ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಪರೀಕ್ಷೆಗೆ 39 ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತದ ದಳದ ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಭೇಟಿ ಸಮಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಜಿ. ಮನ್ನಿಕೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.