ಬೇಲೂರು ರಥೋತ್ಸವದ ಸಿದ್ಧತೆ ಪರಿಶೀಲಿಸಿದ ಡೀಸಿ ಸತ್ಯಭಾಮ

| Published : Apr 06 2025, 01:49 AM IST

ಸಾರಾಂಶ

ಜಾತ್ರಾ ಮಹೋತ್ಸವ ಪ್ರಾರಂಭವಾದಾಗಿನಿಂದಲೂ ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಿ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜತೆಗೆ ಮೊಬೈಲ್ ಶೌಚಗೃಹ, ಸ್ಥಾನ ಗೃಹ, ವಿಶ್ರಾಂತಿ ಟೆಂಟ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೂ ವಿದ್ಯುತ್ ದೀಪಗಳಿಂದ ಸಿಂಗರಿಸಲು ಜಿಲ್ಲಾಧಿಕಾರಿಗಳು ಆದೇಶಿಸಬೇಕು.

ಕನ್ನಡಪ್ರಭ ವಾರ್ತೆ ಬೇಲೂರು

ಶ್ರೀ ಚನ್ನಕೇಶವ ಸ್ವಾಮಿಯ ಜಾತ್ರಾ ಮಹೋತ್ಸವ ಏ.10ರಂದು ಪ್ರಾರಂಭವಾಗುತ್ತಿದ್ದು, ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಹೇಳಿದರು.

ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಶನಿವಾರ ಭೇಟಿ ನೀಡಿ ಜಾತ್ರೆಗೂ ಮುನ್ನಾ ಸಿದ್ಧತೆ ಪರಿಶೀಲಿಸಿ, ಗುತ್ತಿಗೆದಾರರು ವಿದ್ಯುತ್ ಅಲಂಕಾರವನ್ನು ಉತ್ತಮವಾಗಿ ಮಾಡುವಂತೆ ಸೂಚಿಸಿದರು. ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇಗುಲದಲ್ಲಿ ಸಂಪ್ರದಾಯದಂತೆ ಎಲ್ಲ ವಿಧಿವಿಧಾನಗಳು ನಡೆಯಲಿವೆ. ಇಲ್ಲಿಗೆ ಎಲ್ಲ ರೀತಿಯ ಸೌಕರ್ಯ ಒದಗಿಸುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ ಮತ್ತು ಎರಡು ದಿನ‌ ನಡೆಯುವ ರಥೋತ್ಸವಕ್ಕೆ ರಾಜ್ಯಾದ್ಯಂತ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಸೌಲಭ್ಯ ಕೈಗೊಳ್ಳಲಾಗಿದೆ. ಈಗಾಗಲೇ ಶಾಸಕರ ಅಧ್ಯಕ್ಷತೆಯಲ್ಲಿ ಆಡಳಿತಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಸ್ಥಳೀಯವಾಗಿ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಜಾತ್ರ ಮಹೋತ್ಸವಕ್ಕೆ ವಿಶೇಷವಾಗಿ ದೀಪಾಲಂಕಾರ ಮಾಡುವುದಕ್ಕೆ ಸಭೆಯಲ್ಲಿ ತಿರ್ಮಾನಿಸಲಾಗಿದ್ದು, ಯಾವುದೇ ಕಾರಣಕ್ಕೂ‌ ಲೋಪವಾಗದಂತೆ ದೀಪಾಲಂಕಾರ ಮಾಡಬೇಕು. ಕಲ್ಯಾಣಿಯ ಸುತ್ತಮುತ್ತ ಕುಡಿಯುವ ನೀರಿನ ವ್ಯವಸ್ಥೆ, ಮುಡಿ ಕಟ್ಟೆ, ಸ್ನಾನ ಗೃಹಕ್ಕೆ ಶುಲ್ಕ ನಿಗಧಿಪಡಿಸಲಾಗಿದೆ ಹಾಗೂ ಕಲ್ಯಾಣಿಯಲ್ಲಿ ಹೂಳು ಹೆಚ್ಚಾಗಿರುವುದರಿಂದ ಅಲ್ಲಿ ಯಾವುದೇ ಅವಘಡವಾಗದಂತೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗುವುದು. ಬೇಲೂರಿಗೆ ಬರುವ ಪ್ರವಾಸಿಗರು ಮತ್ತ ಭಕ್ತರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ವ್ಯವಸ್ಥೆಗೆ ಅಧಿಕಾರಿಗಳು ಮುಂದಾಗಬೇಕಿದೆ. ಸ್ವಚ್ಛತೆ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದ ನಾಲ್ಕು ಭಾಗಗಳಲ್ಲಿ ಸ್ವಾಗತ ಕಮಾನು ನಿರ್ಮಿಸಲು ಪುರಸಭೆ ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದರು.

ಪುರಸಭೆ ಅಧ್ಯಕ್ಷ ಅಶೋಕ್ ಮಾತನಾಡಿ, ಜಾತ್ರಾ ಮಹೋತ್ಸವ ಪ್ರಾರಂಭವಾದಾಗಿನಿಂದಲೂ ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಿ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜತೆಗೆ ಮೊಬೈಲ್ ಶೌಚಗೃಹ, ಸ್ಥಾನ ಗೃಹ, ವಿಶ್ರಾಂತಿ ಟೆಂಟ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೂ ವಿದ್ಯುತ್ ದೀಪಗಳಿಂದ ಸಿಂಗರಿಸಲು ಜಿಲ್ಲಾಧಿಕಾರಿಗಳು ಆದೇಶಿಸಬೇಕು. ಮತ್ತು ವಿಶೇಷವಾಗಿ ಜಾತ್ರಾ ಮಹೋತ್ಸವ ಆಚರಿಸುತ್ತಿರುವುದರಿಂದ ಜಿಲ್ಲಾಡಳಿತದ ಸಂಪೂರ್ಣ ಸಹಕರಿಸಬೇಕು ಎಂದು ಮನವಿ ಮಾಡಿದರು.

ಅಪರ ಜಿಲ್ಲಾಧಿಕಾರಿ ಹಾಗೂ ಆಡಳಿತಾಧಿಕಾರಿ ಶಾಂತಲಾ, ಎಸಿ ಮಾರುತಿ, ಇಒ ಯೋಗೀಶ್, ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ಟರು, ನರಸಿಂಹ ಪ್ರಿಯಾ ಭಟ್ಟರ್, ಪುರಸಭೆ ಸದಸ್ಯರಾದ ಜಗದೀಶ್, ಅಕ್ರಂ, ಶ್ರೀನಿವಾಸ್, ಅರ್ಬನ್ ಬ್ಯಾಂಕ್ ನಿರ್ದೇಶಕ ನಾಗೇಶ್ ಸೇರಿದಂತೆ ಇತರರಿದ್ದರು.