ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರ ಕಾಮಗಾರಿ, ಅರಕೇರಿ ಜಾಕ್ವೆಲ್ದಿಂದ ಕೆರೆಗೆ ನೀರು ತುಂಬಿಸುವ ಕಾಮಗಾರಿ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರ ಕಾಮಗಾರಿ, ಅರಕೇರಿ ಜಾಕ್ವೆಲ್ದಿಂದ ಕೆರೆಗೆ ನೀರು ತುಂಬಿಸುವ ಕಾಮಗಾರಿ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು, ಪೌರ ಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ, ಈಗಾಗಲೇ ನಿರ್ಮಾಣವಾಗಿರುವ ಹಾಗೂ ಹಂಚಿಕೆ ಮಾಡಲಾದ ಜಿ+೨ ಮಾದರಿಯ ೫೬ ಗುಂಪು ಮನೆಗಳಲ್ಲಿ ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದರು. ಅಲ್ಲದೇ, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ೬೦ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದಲ್ಲಿ ಪಿಎಂಎವೈ ಯೋಜನೆಯಡಿ ನಿರ್ಮಾಣವಾಗುತ್ತಿರುವ ಜಿ+೧ ಮಾದರಿಯ ೧೪೯೩ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.ನಗರದ ರಿಂಗ್ ರಸ್ತೆ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೋಲಾಪೂರ ರಾಷ್ಟ್ರೀಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯುಜಿಡಿ ಲೈನ್ ಸ್ಥಳಾಂತರ ಹಾಗೂ ಕುಡಿಯುವ ನೀರಿನ ಪೈಪ್ಲೈನ್ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯಪುರ ನಗರದ ವಿವಿಧ ವಾರ್ಡ್ಗಳಿಗೆ ಕುಡಿಯುವ ನೀರಿನ ಜಲಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ಮುಖ್ಯ ಪಾತ್ರವಹಿಸುವ ಅರಕೇರಿ ಜಾಕ್ವೇಲ್ಗೆ ಭೇಟಿ ನೀಡಿದ ಅವರು, ಕುಡಿಯುವ ನೀರು ಸರಬರಾಜು ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.