ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕಾರ್ಯಕರ್ತರು ಹಾಗೂ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಕ್ಷವನ್ನು ಸಂಘಟಿಸುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ವೀಕ್ಷಕ ರಿಪಿನ್‍ಬೊಹರಾ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ರಾಹುಲ್‍ಗಾಂಧಿರವರ ಭಾರತ್ ಜೋಡೊ ಯಾತ್ರೆಯ ಉದ್ದೇಶ. ದೇಶದ ಪ್ರತಿ ಪ್ರಜೆಗೆ ತಲುಪಿಸುವುದು ಅಭಿಯಾನದ ಗುರಿ. 2025 ರಲ್ಲಿ ಆರಂಭಗೊಂಡ ಈ ಅಭಿಯಾನ 22 ರಾಜ್ಯಗಳಲ್ಲಿದೆ. 2027ಕ್ಕೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಅನೇಕ ರಾಜಕೀಯ ಸವಾಲುಗಳನ್ನು ಪಕ್ಷ ಎದುರಿಸುತ್ತಿದೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಶಾಸಕರು, ಮಾಜಿ ಶಾಸಕರು, ಎಂಎಲ್‍ಸಿ. ಎಕ್ಸ್ ಎಂಪಿ ಗಳ ಜೊತೆ ಚರ್ಚಿಸಿ ನಂತರ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ಆರು ಹೆಸರುಗಳನ್ನು ಎಐಸಿಸಿ. ಹಾಗೂ ಕೆಪಿಸಿಸಿಗೆ ಕಳಿಸಲಾಗುವುದು. ಧರ್ಮ ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕೋಮುವಾದಿ ಬಿಜೆಪಿ ಯನ್ನು ಕಿತ್ತೊಗೆದು ಮುಂದೆ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರ ತರಬೇಕು. ಶೋಷಿತರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಬಿಜೆಪಿ. ತಾರತಮ್ಯವೆಸಗುತ್ತಿದೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಲಿದೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿ, ಸಂವಿಧಾನ ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಈಗ ರಾಷ್ಟ್ರ ವ್ಯಾಪಿ ಸಂಘಟನ್ ಸೃಜನ್ ಅಭಿಯಾನ ಹಮ್ಮಿಕೊಂಡಿದೆ. ಪಕ್ಷದ ನೈಜ ಕಾರ್ಯಕರ್ತರು ಹಾಗೂ ಜನಸಾಮಾನ್ಯರಿಂದ ಮಾಹಿತಿ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಆರು ಜನರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿಗೆ ಕಳಿಸಲಾಗುವುದು. ಭದ್ರಾ ಮೇಲ್ದಂಡೆ, ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಅನುದಾನದ ಕೊರತೆ, ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಪಕ್ಷ ಸಂಘಟಿಸುವ ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕಾಂಗ್ರೆಸ್ ಗೆಲ್ಲಬೇಕೆಂದರು.


ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ, ಸೈಯದ್ ಅಹಮದ್,ಸೌಗಂಧಿಕ ರಘುನಾಥ್,ಎನ್.ರಮೇಶ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಡಿ.ಟಿ.ವೆಂಕಟೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಅಲ್ಲಾಭಕ್ಷಿ, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ್, ಮಧುಪಾಲೆಗೌಡ ಇದ್ದರು.