ಸಾರಾಂಶ
ಉಡುಪಿ : ನಗರದ ಕನ್ನರ್ಪಾಡಿ ಕಿನ್ನಿಮುಲ್ಕಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪಂಚಮುಖಿ ಗಣೇಶನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇಂತಹ ಗಣೇಶೋತ್ಸವಗಳಿಂದ ಸಂಘಟನೆ ಸಾಧ್ಯವಾಗುತ್ತದೆ, ಆದರೆ ಇದಕ್ಕೆ ಸಾರ್ವಜನಿಕರ ಸಹಕಾರವೂ ಬೇಕಾಗುತ್ತದೆ. ಸಾಮಾಜಿಕ ಕಾರ್ಯಕರ್ತರಾಗಿರುವ ಕೃಷ್ಣಮೂರ್ತಿ ಆಚಾರ್ಯ ಅವರು ಯಾವುದೇ ಹುದ್ದೆ ಸ್ಥಾನವನ್ನು ಆಪೇಕ್ಷಿಸದೇ ಕಳೆದ 20 ವರ್ಷಗಳಿಂದ ಇಲ್ಲಿ ಗಣೇಶೋತ್ಸವವನ್ನು ಆಚರಿಸುತ್ತಿದ್ದಾರೆ. ಅವರಿಗೆ ಜನರ ಬೆಂಬಲದ ಜೊತೆಗೆ ಗಣೇಶನ ಕೃಪೆಯೂ ಸಿಗಲಿ, ಅವರ ಜೊತೆಗೆ ಸದಾ ನಾನಿದ್ದೇನೆ ಎಂದು ಹೇಳಿದರು.
ಸಿಎಂ ಆಗಿ ಬರುವಂತಾಗಲಿ : ಈ ಸಂದರ್ಭ ಉಪಮುಖ್ಯಮಂತ್ರಿ ಅವರಿಗೆ ಸ್ಮರಣಿಕೆ, ಪ್ರಸಾದಗಳನ್ನು ನೀಡಿ ಗೌರವಿಸಿದ ಈ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ, ಮುಂದಿನ ವರ್ಷ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಲ್ಲಿಗೆ ಬರುವಂತಾಗಲಿ ಎಂದು ಹಾರೈಸಿದರು.
ಅಮೃತಾ ಕೃಷ್ಣಮೂರ್ತಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ರಾಜ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಎಂ.ಎ. ಗಫೂರ್ ಮತ್ತು ಗಣೇಶೋತ್ಸವ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.