ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಬರ ವೀಕ್ಷಣೆಗೆ ಹನೂರು ತಾಲೂಕಿಗೆ ಆಗಮಿಸಿದ್ದ ವೇಳೆ ರಾಮಾಪುರ ಕೇಂದ್ರಕ್ಕೆ ಭೇಟಿ ನೀಡಲಿಲ್ಲ ಎಂದು ಆರೋಪಿಸಿ ರೈತ ಸಂಘದ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಬರ ವೀಕ್ಷಣೆಗೆ ಹನೂರು ತಾಲೂಕಿಗೆ ಆಗಮಿಸಿದ್ದ ವೇಳೆ ರಾಮಾಪುರ ಕೇಂದ್ರಕ್ಕೆ ಭೇಟಿ ನೀಡಲಿಲ್ಲ ಎಂದು ಆರೋಪಿಸಿ ರೈತ ಸಂಘದ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ನಿಗದಿತ ಕಾರ್ಯಕ್ರಮದಂತೆ ಅಜ್ಜೀಪುರ, ದಾಸನದೊಡ್ಡಿ, ರಾಮಾಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಡಿಸಿಎಂ ಅವರು ಹನೂರು ಮತ್ತು ಅಜ್ಜೀಪುರ ಗ್ರಾಮಕ್ಕೆ ಮಾತ್ರ ಭೇಟಿ ನೀಡಿ ವಾಪಸ್ ತೆರಳಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ತಾಲೂಕಿನ ಅತ್ಯಂತ ಬರಪೀಡಿತ ಪ್ರದೇಶವಾಗಿರುವ ರಾಮಾಪುರ ಭಾಗಕ್ಕೆ ಡಿಸಿಎಂ ಅವರು ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿಯಬೇಕು ಎಂದು ರೈತರು ಒತ್ತಾಯಿಸಿದರು. ಈ ಭಾಗದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ತೀವ್ರವಾಗಿದೆ. ನಾವು ಸಚಿವರಿಗೆ ಮನವಿ ನೀಡಿ ಜಾನುವಾರಿಗೆ ಮೇವು, ಕುಡಿಯುವ ನೀರು ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಲು ಕಾಯುತ್ತಿದ್ದೆವು. ಆದರೆ ಸಚಿವರು ನಮ್ಮ ಗ್ರಾಮಕ್ಕೆ ಬಾರದೆ ನಿರ್ಲಕ್ಷ್ಯ ಮಾಡಿ ವಾಪಸ್ ತೆರಳಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿದರು.