ದೊಡ್ಡಬಳ್ಳಾಪುರ: ಜನರ ಪಾಲ್ಗೊಳ್ಳುವಿಕೆಯ ಮೂಲಕ ಮಾದರಿ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ್ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ನಡೆದ ತಳಹಂತದಿಂದ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಕೇಂದ್ರೀಕರಣ ವ್ಯವಸ್ಥೆ ಬದಿಗೆ ಸರಿಸಿ ಕೇಂದ್ರೀಕರಣ ವ್ಯವಸ್ಥೆ ಬಂದರೆ ಅಲ್ಲಿ ಸರ್ವಾಧಿಕಾರತ್ವ ನೆಲೆಗೊಳ್ಳುತ್ತದೆ. ಕೇಂದ್ರೀಕರಣ ವ್ಯವಸ್ಥೆಯಿಂದ ಹಳ್ಳಿ ಮತ್ತು ನಗರಗಳ ನಡುವೆ ಕಂದಕ ಸೃಷ್ಟಿಯಾಗುತ್ತದೆ. ಹಳ್ಳಿಗಳಲ್ಲಿ ವಲಸೆ ಹೆಚ್ಚುತ್ತದೆ. ಇದನ್ನು ತಡೆಯಲು ವಿಕೇಂದ್ರೀಕರಣ ವ್ಯವಸ್ಥೆ ಬಲಿಷ್ಠಗೊಳಿಸಬೇಕಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ಅವರ ಆಶೋತ್ತರಗಳನ್ನು ಈಡೇರಿಸುವವುದು ನಮ್ಮೆಲ್ಲರ ಜವಾಬ್ದಾರಿಗಿರುತ್ತದೆ. ಗ್ರಾಮ ಹಾಗೂ ವಾಡ್೯ ಸಭೆಗಳಿಂದ ಜನರ ಅಭಿಪ್ರಾಯ ಪಡೆದು ತಾಲೂಕು ಮಟ್ಟದ ಯೋಜನೆ ರೂಪಿಸಿ ನಂತರ ಪ್ರಯಾರಿಟಿ ಪಟ್ಟಿಯೊಂದಿಗೆ ಸರ್ಕಾರದ ಹಣಕಾಸು ಇತಿಮಿತಿಯೊಳಗೆ ಜಿಲ್ಲಾ ಮಟ್ಟದಲ್ಲಿ‌ ಕ್ರೋಢಿಕರಿಸಿ ವರದಿಯನ್ನು ನೀಡಿ. ಜಿಲ್ಲಾ ಯೋಜನಾ ಸಮಿತಿಗಳ ಕಾರ್ಯನಿರ್ವಹಣೆ ಪರಿಣಾಮಕಾರಿಯಾಗಿ ನಡೆದರೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನರ ಕಷ್ಟಗಳು ಪರಿಹಾರವಾಗುವ ಜೊತೆಗೆ ಜಿಲ್ಲೆ ಅಭಿವೃದ್ಧಿ ಆಗುತ್ತದೆ ಎಂದರು.

ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಿದ ನಂತರ ಆ ಯೋಜನೆಗಳು ಮುಂದಿನ ಬಜೆಟ್(ಆಯವ್ಯಯದಲ್ಲಿ) ಬರಬೇಕು. ಇದರಿಂದ ಜನರ ಆಶೋತ್ತರಗಳು ಬೆಲೆ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಮುಂದಿನ ಯೋಜನೆ ಅನುಷ್ಠಾನದಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಒತ್ತು ನೀಡಿ ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಸ್ವಲ್ಪ ಮಟ್ಟಿಗೆ ನೋಡಬಹುದು. ನಗರ ಪ್ರದೇಶದಲ್ಲಿ ಜನರ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಆದರಿಂದ ನಗರ ಸ್ಥಳೀಯ ಸಂಸ್ಥೆಗಳು ನೆಯ್ಬರ್ ವುಡ್ ಗ್ರೂಪ್ ರಚಿಸಿ ನಂತರ ವಾಡ್೯ ಸಭೆಗಳನ್ನು ರಚಿಸಿ ನಗರ ಪ್ರದೇಶದ ಯೋಜನೆಗಳನ್ನು ರೂಪಿಸಿ ಎಂದರು.


ಗ್ರಾಪಂಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು, ನೇರವಾಗಿ ಗ್ರಾಪಂಗಳಿಗೆ ಅನುದಾನ ಬರಬೇಕು. ಇದರಿಂದ ರಸ್ತೆ, ಚರಂಡಿ, ವಿದ್ಯುತ್, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ವೇಗ ಹೆಚ್ಚಾಗಲಿದೆ. ಹಾಗಾಗಿ ಡಿ.ಆರ್ ಪಾಟೀಲ್ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪಂಚಾಯಿತಿಗಳ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕುರಿತು ಒಂದು ವಿಸ್ತೃತ ವರದಿಯನ್ನು ಸಿದ್ದಪಡಿಸಲಿ, ಶೀಘ್ರ ನಾವು ವರದಿ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಿದ್ದೇವೆ ಎಂದರು.

ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಜಿಲ್ಲೆಯ ಅಭಿವೃದ್ಧಿಗೆ ರೂಪಿಸಿರುವ ಯೋಜನೆಯ ವಿವರಗಳನ್ನು ವಿವರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ನಿರ್ದೇಶಕ ಕೆಂಪೇಗೌಡ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

24ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ತಳಹಂತದಿಂದ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳ ಸಭೆ ನಡೆಯಿತು.