ಸಾರಾಂಶ
ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಸಾರ್ವಜನಿಕರಿಂದ 113 ದೂರು ಅಹವಾಲುಗಳನ್ನು ಸ್ವೀಕರಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ಕನ್ನಡಪ್ರಭ ವಾರ್ತೆ ಗದಗ
ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ಈಗಾಗಲೇ ನೋಂದಣಿಯಾಗಿವೆ. ಅವುಗಳಲ್ಲಿ 40 ಪ್ರಕರಣಗಳನ್ನು ಆಯ್ಕೆ ಮಾಡಿಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲು ವಿಚಾರಣೆ ನಡೆಸಲಾಗಿ 22 ದೂರಿನ ಪ್ರಕರಣಗಳ ತೀರ್ಮಾನ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 40 ಪ್ರಕರಣಗಳಲ್ಲಿ ಉಳಿದ ಪ್ರಕರಣಗಳನ್ನು ಶೀಘ್ರದಲ್ಲಿಯೇ ಹೆಚ್ಚಿನ ತನಿಖೆ ನಡೆಸಿ ಅಂತಿಮಗೊಳಿಸಲಾಗುವುದು ಎಂದರು.
ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಸಾರ್ವಜನಿಕರಿಂದ 113 ದೂರು ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಇವುಗಳಲ್ಲಿ ಕೆಲವು ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳು ಸೇರಿವೆ. ಸಾರ್ವಜನಿಕರ ಹಲವಾರು ದೂರುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಸಮಯಾವಕಾಶ ನಿಗದಿಪಡಿಸಿ ಇತ್ಯರ್ಥಪಡಿಸಿ ಲೋಕಾಯುಕ್ತ ಸಂಸ್ಥೆಗೆ ವರದಿ ನೀಡಲು ಸೂಚಿಸಲಾಗಿದೆ. ನಿಗದಿಪಡಿಸಿದ ಸಮಯಾವಕಾಶದೊಳಗೆ ಸಮಸ್ಯೆ ಇತ್ಯರ್ಥಪಡಿಸದೇ ಇದ್ದಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.ದೂರು ಸ್ವೀಕಾರವಾದ ತಕ್ಷಣ ಪ್ರಾಥಮಿಕ ವರದಿ ತರಿಸಿಕೊಂಡು ಎದುರುದಾರರು ತಪ್ಪಿತಸ್ಥರೆಂದು ಕಂಡುಬಂದಲ್ಲಿ ನೋಟಸ್ ಜಾರಿಗೊಳಿಸುವ ಮೂಲಕ ವಿಚಾರಣೆ ನಡೆಸಲಾಗುವುದು. ಅಧಿಕಾರಿಗಳು ಕರ್ತವ್ಯ ಲೋಪಕ್ಕೆ ಆಸ್ಪದ ನೀಡದಂತೆ ಕೆಲವು ಪ್ರಕರಣಗಳಲ್ಲಿ ಸೂಚನೆ ನೀಡಲಾಗಿದೆ. ಹಲವು ಅಧಿಕಾರಿಗಳಿಗೆ ತಪ್ಪು ಮರುಕಳಿಸಬಾರದೆಂದು ಎಚ್ಚರಿಕೆ ಮಾಡಲಾಗಿದೆ. ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಶಿಸ್ತು ಕ್ರಮ ಅನಿವಾರ್ಯವೆಂದು ತಿಳಿಸಲಾಗಿದೆ ಎಂದರು.
ಉಪಲೋಕಾಯುಕ್ತನಾಗಿ ನಾನು ಕಳೆದ ಎರಡು ವರ್ಷ ಮೂರು ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಲೋಕಾಯುಕ್ತ ಸಂಸ್ಥೆಯಲ್ಲಿ 18,000ಕ್ಕೂ ಅಧಿಕ ಪ್ರಕರಣಗಳು ನೋಂದಣಿಯಾಗಿ ವಿವಿಧ ಹಂತದ ತನಿಖೆಯಲ್ಲಿವೆ. ಸಂಸ್ಥೆಯಲ್ಲಿ ಶೇ. 60ರಷ್ಟು ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಉಪಲೋಕಾಯುಕ್ತರ ಇನ್ನೊಂದು ಹುದ್ದೆ ಖಾಲಿ ಇದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಈ ವರೆಗೆ ಒಟ್ಟು 13 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹಲವಾರು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಕೆಲವು ಪ್ರಕರಣಗಳಿಗೆ ವಿಚಾರಣೆ ನಡೆಸಿ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಜನಸಾಮಾನ್ಯರ ವಿಶ್ವಾಸಾರ್ಹತೆ ಗಳಿಸುವಲ್ಲಿ ಲೋಕಾಯುಕ್ತ ಸಂಸ್ಥೆ ಮಹತ್ವ ಪಡೆದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಪಂ ಸಿಇಒ ಭರತ್ ಎಸ್., ಸಂಪನ್ಮೂಲ ವ್ಯಕ್ತಿ ಪ್ರಕಾಶ ನಾಡಗೇರ, ಉಪನಿಬಂಧಕ ಅಮರನಾರಾಯಣ ಕೆ., ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಿಎಂ ಪಾಟೀಲ, ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ, ಡಿವೈಎಸ್ಪಿ ವಿಜಯ ಬಿರಾದಾರ ಉಪಸ್ಥಿತರಿದ್ದರು.