ಕನ್ನಡಪ್ರಭ ವಾರ್ತೆ ಬೆಳಗಾವಿ

ಕೇಂದ್ರ ಸರ್ಕಾರ ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಅಧಿಕೃತವಾಗಿ ಘೋಷಿಸಬೇಕು. ಈ ಬೇಡಿಕೆಗೆ ಸ್ಪಂದಿಸದಿದ್ದರೆ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಮುಕ್ತಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಘೋಷಿಸುವಂತೆ ಒತ್ತಾಯಿಸಿ ದೇಶವ್ಯಾಪಿ ನಡೆಯುತ್ತಿರುವ ಸಹಿ ಅಭಿಯಾನದ ಎರಡನೇ ಹಂತದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸಂಗ್ರಹಿಸಲಾದ 1.80 ಲಕ್ಷ ಸಹಿಗಳನ್ನು ಒಳಗೊಂಡ ಮನವಿ ಪತ್ರವನ್ನು ಸೋಮವಾರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಸಲ್ಲಿಸಿ ಮಾತನಾಡಿದರು. ಗೋವು ಭಾರತೀಯ ಸಂಸ್ಕೃತಿ, ಕೃಷಿ ಪರಂಪರೆ, ಗ್ರಾಮೀಣ ಜೀವನ ಮತ್ತು ಧಾರ್ಮಿಕ ನಂಬಿಕೆಗಳ ಅವಿಭಾಜ್ಯ ಅಂಗವಾಗಿದೆ. ಗೋಸಂರಕ್ಷಣೆಗೆ ಕೇವಲ ಘೋಷಣೆಗಳು ಸಾಲದು, ಗೋಮಾತೆಗೆ ರಾಷ್ಟ್ರಮಾತೆಯ ಗೌರವ ನೀಡುವುದರ ಜತೆಗೆ ದೇಶಾದ್ಯಂತ ಗೋಹತ್ಯೆ ನಿಷೇಧಿಸಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ನಗರದ ಚನ್ನಮ್ಮ ವೃತ್ತದಿಂದ ವಿವಿಧ ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು, ಗೋಭಕ್ತರು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಗರದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಬಳಿಕ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಗೋಮಾತೆಯನ್ನು ರಾಷ್ಟ್ರಮಾತೆ ಎಂದು ಘೋಷಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗೋವು ಕೇವಲ ಧಾರ್ಮಿಕ ನಂಬಿಕೆಯ ಸಂಕೇತವಾಗಿರದೆ, ಕೃಷಿ ಆಧಾರಿತ ಜೀವನ ವ್ಯವಸ್ಥೆಯ ಪ್ರಮುಖ ಅಂಗವಾಗಿದೆ. ಆದ್ದರಿಂದ ಗೋವುಗಳ ರಕ್ಷಣೆ ಮತ್ತು ಸಂರಕ್ಷಣೆಗೆ ದೇಶವ್ಯಾಪಿ ಸಮಗ್ರ ಕಾನೂನು ರೂಪಿಸಬೇಕು. ಗೋಮಾತೆಯ ರಕ್ಷಣೆ, ಸಂರಕ್ಷಣೆ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಗೋವಿನ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದ ಬಳಿಕ ಎರಡನೇ ಹಂತದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳು, ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.


ಪ್ರತಿಭಟನೆಯಲ್ಲಿ ಗೋ ರಕ್ಷಕ ನೀಲೇಶ, ಮಾರುತಿ ಕೋಳಿ, ಆನಂದ ನವಲೆ, ಆನಂದ ಶೆಟ್ಟಿ, ಸುರೇಂದ್ರ ಭಂಡಾರಿ, ಪ್ರಕಾಶ ಲಾಡವ, ಮುಕುಂದ, ಅರುಣಕುಮಾರ, ರಾಜು ಬಾದಾಮಿ, ಚಿದಂಬರ ಕನಕಗಿರಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಗೋಭಕ್ತರು ಪಾಲ್ಗೊಂಡಿದ್ದರು.