ನವಲಗುಂದ:

ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದು, ನವಲಗುಂದ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಕ್ಷೇತ್ರವೆಂದು ಘೋಷಿಸುವುದು ಹಾಗೂ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆಯನ್ನು ತಕ್ಷಣ ಮಂಜೂರು ಮಾಡಬೇಕೆಂದು ಬಿಜೆಪಿ ನವಲಗುಂದ ಮಂಡಳದಿಂದ ಮಂಗಳವಾರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದ ಪರಿಣಾಮ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ. ಆದರೆ, ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ ಬೆಳೆಗಳು ಒಣಗಿದ್ದು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರಿಂದ ಕ್ಷೇತ್ರವನ್ನು ಬರಪೀಡಿತವೆಂದು ಘೋಷಿಸುವ ಜತೆಗ ಕಳೆದ ಹಿಂಗಾರಿನ ಬೆಳೆ ವಿಮೆ ಹಣ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಪ್ರಸ್ತಕ್ತ ಮುಂಗಾರು ಹಂಗಾಮಿನ ಬೆಳೆ ವಿಮೆ ತುಂಬುವ ಕುರಿತು ಉಂಟಾಗಿರುವ ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿದ ಮುಖಂಡರು, ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕತೆಯಿಂದ ನಡೆಯತ್ತಿಲ್ಲ. ಈ ಕುರಿತು ತಪ್ಪಿಸ್ಥರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಂಡಳ ಅಧ್ಯಕ್ಷ ಗಂಗಪ್ಪ ಮನಮಿ, ದೇವರಾಜ ದಾಡಿಭಾವಿ, ಷಣ್ಮುಖ ಗುರಿಕಾರ, ಅಂದಾನಯ್ಯ ಹಿರೇಮಠ, ಮಲ್ಲಿಕಾರ್ಜುನ ಸಂಗನಗೌಡ್ರ, ಸಿದ್ದನಗೌಡ ಪಾಟೀಲ, ನಾಗಪ್ಪ ಹರ್ತಿ, ಸಿದ್ದಣ್ಣ ಕಿಟಗೇರಿ ಸೇರಿದಂತೆ ನೂರಾರು ಪದಾಧಿಕಾರಿಗಳು ಇದ್ದರು.