ಕನ್ನಡಪ್ರಭ ವಾರ್ತೆ ತಿಪಟೂರು

ತಾಲೂಕಿನಾದ್ಯಂತ ಮಳೆ ಅಭಾವದಿಂದ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ತಕ್ಷಣವೇ ವಾಸ್ತವ ಸ್ಥಿತಿ ಪರಿಶೀಲಿಸಿ ತಿಪಟೂರು ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕೆಂದು ತಾಲೂಕು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ತಾಲೂಕಿನ ಮತ್ತಿಹಳ್ಳಿ ಹಾಗೂ ಗೊಲ್ಲರಹಟ್ಟಿ ಸೇರಿದಂತೆ ಹೊನ್ನವಳ್ಳಿಯ ಹಲವಾರು ಬರಪೀಡಿತ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಕೃಷಿ, ತೋಟಗಾರಿಕೆ ಜಮೀನುಗಳ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಸಕಾಲಕ್ಕೆ ಮಳೆಯಾಗದೆ ಕೃಷಿ ನಂಬಿ ಬದುಕುತ್ತಿರುವ ಸಾವಿರಾರು ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಕೆಲವೇ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ತೀವ್ರ ಆರ್ಥಿಕ ಹೊರೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ವಿಶೇಷ ತಂಡವನ್ನು ತಕ್ಷಣ ರಚಿಸಿ, ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆ, ಬೆಳೆ ನಷ್ಟ, ಅಂತರ್ಜಲ ಮಟ್ಟ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ತುರ್ತು ವರದಿ ಸಲ್ಲಿಸಬೇಕು ಎಂದರು. ಜಾನುವಾರುಗಳಿಗೆ ನೀರು ಮತ್ತು ಮೇವಿನ ಅಭಾವ ತಪ್ಪಿಸಲು ಹಾಗೂ ರೈತರು ದನ-ಕರುಗಳನ್ನು ಮಾರಾಟ ಮಾಡುವುದನ್ನು ತಡೆಯಲು ತಕ್ಷಣ ಮೇವು ಬ್ಯಾಂಕ್ ತೆರೆಯಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯದರ್ಶಿ ಶಿವಸ್ವಾಮಿ, ಯುವ ಘಟಕದ ಅಧ್ಯಕ್ಷ ಸುದರ್ಶನ್, ಯುವ ಮುಖಂಡರಾದ ತೀರ್ಥ ಕುಮಾರ್, ರಾಜಶೇಖರ್ ಸೇರಿದಂತೆ ಜೆಡಿಎಸ್ ಮುಖಂಡರುಗಳು, ಕಾರ್ಯಕರ್ತರು ಹಾಗೂ ರೈತರು ಬರವೀಕ್ಷಣೆ ವೇಳೆ ಪಾಲ್ಗೊಂಡಿದ್ದರು.