ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಹೋರಾಟ ಸಮಿತಿಯ ಸದಸ್ಯರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಬ್ಯಾಡಗಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಹೋರಾಟ ಸಮಿತಿಯ ಸದಸ್ಯರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ಮುರಿಗೆಪ್ಪ ಶೆಟ್ಟರ, ಪ್ರಸಕ್ತ ವರ್ಷವೂ ಮುಂಗಾರು ಮಳೆ ಸಮರ್ಪಕವಾಗಿ ಬಾರದಿರುವ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಮಳೆಯ ಕೊರತೆ ಕಾರಣ ಸಾಲ-ಸೂಲ ಮಾಡಿ, ಬಿತ್ತನೆ ನಡೆಸಿದ್ದ ರೈತರ ಬೆಳೆಗಳು ಒಣಗುತ್ತಿವೆ. ರೈತರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಕುಟುಂಬ ನಿರ್ವಹಣೆ ಕೂಡ ಕಷ್ಟಸಾಧ್ಯವೆಂದು ಆತಂಕ ವ್ಯಕ್ತಪಡಿಸಿದರು.ಬರಪೀಡಿತ ಎಂದು ಘೋಷಿಸಿ: ರೈತ ನಿಂಗಪ್ಪ ಮಾಗೋಡ ಮಾತನಾಡಿ, ಸರ್ಕಾರ ಕೂಡಲೇ ರೈತರ ಹೊಲಗಳಿಗೆ ಅಧಿಕಾರಿಗಳ ತಂಡ ಕಳುಹಿಸಿ ಬೆಳೆಹಾನಿ ಸಮೀಕ್ಷೆ ನಡೆಸಬೇಕು, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಹಾನಿಗೊಳಗಾದ ರೈತರಿಗೆ ಪರಿಹಾರ ಘೋಷಿಸುವುದರ ಜೊತೆಗೆ ಬೆಳೆಸಾಲ ಮರುಪಾವತಿಗೆ ಕಾಲಾವಕಾಶ ನೀಡಬೇಕು ಹಾಗೂ ರೈತರ ಮೇಲಿರುವ ಬಡ್ಡಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಫಸಲ್ ಭೀಮಾ ಯೋಜನೆ ಹಣವೆಲ್ಲಿದೆ: ರೈತ ಈರಣ್ಣ ಮಾತನಾಡಿ, 2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬಾಕಿ ಇರುವ ಬೆಳೆವಿಮೆ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ಅರ್ಹ ರೈತರ ಖಾತೆಗೆ ಜಮಾ ಮಾಡಬೇಕು, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಬರುವ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಹಮ್ಮಿ ಕೊಳ್ಳುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.