ಬೆಳೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು.
ಕನ್ನಡಪ್ರಭ ವಾರ್ತೆ ಸುತ್ತೂರು
ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಮಾಡಬೇಕು, ಹಾಗಾಗಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಅರ್ಹ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಮಂಗಳವಾರ ಬರ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ಅಗತ್ಯ ಮಾಹಿತಿ ಪಡೆದು ಬಳಿಕ ಅವರು ಮಾತನಾಡಿದರು.
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಅಗತ್ಯ ನೆರವು ಒದಗಿಸಲಿದೆ ಎಂದು ಅವರು ಭರವಸೆ ನೀಡಿದರು.ಬೆಳೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎನ್.ಡಿಆರ್ಎಫ್ ಅಡಿಯಲ್ಲಿ ಹೆಚ್ಚಿನ ಪರಿಹಾರ ದೊರೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ ಇರುವ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಗೊಳಿಸಿ, ಬರದಿಂದ ತೀವ್ರವಾಗಿ ಬಾಧಿತವಾಗಿರುವ ಹೆಚ್ಚಿನ ತಾಲೂಕುಗಳಿಗೂ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.ಇನ್ನೂ ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ರೈತರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು. ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿ ಸುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮೃಗಾಲಯ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ರವಿ, ಮಹದೇವಣ್ಣ, ಕೀಳನಪುರ ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಮಣಿ, ಜವರಪ್ಪ, ಬಾಬು. ಮಂಜುಳಾ. ತಾಪಂ ಮಾಜಿ ಸದಸ್ಯ ಮುದ್ದರಾಮೇಗೌಡ, ಗಂಗನ ತಿಮ್ಮಯ್ಯ, ರಾಜು. ಸುರೇಶ್ ಬಾಬು. ಸೋಮಸುಂದರ್, ಶಿವಣ್ಣ ಇದ್ದರು.