ಚನ್ನಪಟ್ಟಣ: ಆರೋಗ್ಯ ಅಮೂಲ್ಯ ನಿಧಿ, ಅದನ್ನು ಸಂರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಕಂಪಾನಿಯೊ ಕಂಪನಿಯ ದಕ್ಷಿಣ ಭಾರತದ ಮುಖ್ಯಸ್ಥ ರತ್ನಾಕರ ಶೆಟ್ಟಿ ತಿಳಿಸಿದರು.
ನಗರದ ಕೋಟೆಯಲ್ಲಿರುವ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಫೂಟ್ ಪಲ್ಸ್ ಥೆರಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಿನದ ೨೪ ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನು ತಮ್ಮ ಆರೋಗ್ಯಕ್ಕಾಗಿ ವ್ಯಾಯಾಮಕ್ಕೆ ಮೀಸಲಿಡುವುದು ಅಗತ್ಯ ಎಂದು ಅವರು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್ ಮಾತನಾಡಿ, ಧಾರ್ಮಿಕ ಕೇಂದ್ರವಾದ ರಾಘವೇಂದ್ರಸ್ವಾಮಿ ಮಠದಲ್ಲಿ ಇಂತಹ ಆರೋಗ್ಯಪರ ಶಿಬಿರಗಳನ್ನು ಆಯೋಜಿಸುತ್ತಿರುವುದು ಅಭಿನಂದನೀಯ. ಸಾರ್ವಜನಿಕರು ಇಂತಹ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಿವಲಿಂಗಯ್ಯ ಮಾತನಾಡಿ, ಮಠಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಇಂತಹ ಶಿಬಿರಗಳು ಪ್ರತಿವರ್ಷ ಮುಂದುವರಿಯಲಿ ಎಂದು ಆಶಿಸಿದರು.ಶ್ರೀಮಠದ ಅಧ್ಯಕ್ಷ ಎಂ.ಎಸ್.ಚಂದ್ರಶೇಖರ್ ಮಾತನಾಡಿ, ಶ್ರೀ ಮಠದ ವತಿಯಿಂದ ಸಾರ್ವಜನಿಕರಿಗಾಗಿ ನಿರಂತರವಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಾಘವೇಂದ್ರ ಮಯ್ಯ, ನಿರ್ದೇಶಕ ಎನ್. ಮೋಹನ್ ಶಿಬಿರದ ಸಂಯೋಜಕರಾದ ಕರುಣಾಕರ, ಅರುಣ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪೊಟೋ೨೫ಸಿಪಿಟಿ೨: ಚನ್ನಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಫೂಟ್ಪಲ್ಸ್ ಥೆರಪಿ ಕಾರ್ಯಕ್ರಮವನ್ನು ರತ್ನಾಕರ ಶೆಟ್ಟಿ ಹಾಗೂ ಇತರರು ಉದ್ಘಾಟಿಸಿದರು.