ತಪೋ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಶ್ರೀ ಗುರುಸಿದ್ದೇಶ್ವರರ ಆಶೀರ್ವಾದದೊಂದಿಗೆ ನಡೆಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನ ಆಲೂರುಸಿದ್ಧಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಮತ್ತು ಶ್ರೀ ಗುರುಸಿದ್ಧವೀರೇಶ್ವರರ ಆಶೀರ್ವಾದದೊಂದಿಗೆ ಶ್ರದ್ಧಾಭಕ್ತಿಯಿಂದ ಸೋಮವಾರ ಸಂಜೆ ನಡೆಯಿತು.ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾದಿಗಳು ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು.ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ, ಶ್ರೀ ಕ್ಷೇತ್ರ ಮನೆಹಳ್ಳಿ ಮಠವು ಈ ಹಿಂದೆ ಅಜ್ಞಾತ ಸ್ಥಳವಾಗಿತ್ತು. ಈಗ ವರ್ಷದಿಂದ ವರ್ಷಕ್ಕೆ ಧಾರ್ಮಿಕತೆಯ ಶ್ರದ್ಧಾಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಕಾಡುಗಳಿಂದ ಕೂಡಿದ್ದ ಈ ಪ್ರದೇಶದಲ್ಲಿ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಗಳ ಶ್ರಮದಿಂದ ಪೂಜೆ, ದಾಸೋಹ ಕಾಯಕಗಳಿಂದ ತಪೋಕ್ಷೇತ್ರವಾಗಿ ಬೆಳೆದು ಬರುತ್ತಿದೆ ಎಂದರು.ಶಿಕ್ಣಣ ತಜ್ಞ ದಾವಣಗೆರೆಯ ಸಾಗರ್ ಮಾತನಾಡಿ, ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ. ಆದರೆ ಕೆಲವರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಿಂದ ಅನೇಕರು ದಾರಿ ತಪ್ಪಿದ್ದಾರೆ. ಆನ್ ಲೈನ್ ಗೇಮ್ ಗಳಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ನೈತಿಕ ಶಿಕ್ಷಣದ ಅವಶ್ಯಕತೆಯಿದೆ. ಬಸವಣ್ಣ ಅವರ ಅನುಭವ ಮಂಟಪದ ರೀತಿಯ ಶಿಕ್ಷಣ ವ್ಯವಸ್ಥೆ ಬರಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಉದ್ಘಾಟಿಸಿದರು. ನಂತರ ಮಾತನಾಡಿ, ಕೊಡಗು ಮಠಗಳ ನಾಡಾಗಿದೆ. ಉತ್ತರ ಕೊಡಗಿನಲ್ಲಿ ಶ್ರೀ ಕ್ಷೇತ್ರ ತಪೋವನ ಮನೆಹಳ್ಳಿ ಮಠವು ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಂದ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿ ರೂಪುಗೊಂಡಿರುವುದು ಹೆಮ್ಮೆಯ ಸಂಗತಿ ಎಂದರು.ಹಿರಿಯ ವಕೀಲ ಚಂದ್ರಮೌಳಿ ಅವರು, ಕ್ಷೇತ್ರದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕಲ್ಲುಮಠದ ಶ್ರೀಮಹಾಂತ ಸ್ವಾಮೀಜಿ, ಮುಳ್ಳೂರು ಮಠದ ಶ್ರೀಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಚಿಲುಮೆ ಮಠದ ಜಯದೇವ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಗಣ್ಯರು ಇದ್ದರು.