ಸಾರಾಂಶ
ಮೂಡಲಗಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದದ್ದರಿಂದ ಸಂವಿಧಾನದ ರಕ್ಷಣೆಯಾಗಲಿದೆ ಎಂದು ಮೂಡಲಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಹೇಳಿದರು
ಕೌಜಲಗಿ ಪಟ್ಟಣದ ದಳವಾಯಿ ತೋಟದ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಕಾಂಗ್ರೆಸ್ ಕಮಿಟಿ ಕಾರ್ಯಕರ್ತರ ಆತ್ಮಾವಲೋಕನ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಪ್ರಯುಕ್ತ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ಸಂವಿಧಾನದ ರಕ್ಷಣೆಗಾಗಿ ಎಲ್ಲರನ್ನು ಕಟ್ಟಿಕೊಂಡು ಭಾರತದಾದ್ಯಂತ ಪಾದಯಾತ್ರೆ, ಸಭೆ, ಸಮಾರಂಭ ಹಾಗೂ ಸತ್ಯಾಗ್ರಹಗಳನ್ನು ಆಯೋಜಿಸಿ ಜನರಲ್ಲಿ ಹೊಸ ಭರವಸೆ ಮೂಡಿಸಿದರು.
ಅದರ ಫಲವೇ ಇಂದು ನಮ್ಮ ಕಾಂಗ್ರೆಸ್ ಪಕ್ಷ ಫಿನಿಕ್ಸ್ ಹಕ್ಕಿಯಂತೆ ಎದ್ದು ಅತಿ ಹೆಚ್ಚು ಸ್ಥಾನ ಗಳಿಸಿ ಬಿಜೆಪಿ ಪಕ್ಷಕ್ಕೆ ಒಂದು ಎಚ್ಚರಿಕೆ ಗಂಟೆಯನ್ನು ಬಾರಿಸಿದುದಲ್ಲದೆ ಸಂವಿಧಾನದ ರಕ್ಷಣೆಯ ಭರವಸೆ ನೀಡಿದೆ ಎಂದರು.
ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳಲ್ಲಿಯೂ ಅರಬಾವಿ ಕಾಂಗ್ರೆಸ್ ಕಾರ್ಯಕರ್ತರು ಸಂಘಟನಾತ್ಮಕವಾಗಿ ದುಡಿದು ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಂತೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ಕಾಂಗ್ರೆಸ್ ಮುಖಂಡರ ವಿ.ಪಿ.ನಾಯಕ್ ಮಾತನಾಡಿ, ಕೆಲವರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ, ಐತಿಹಾಸಿಕ ಕಾಂಗ್ರೆಸ್ ಪಕ್ಷ ಎಲ್ಲ ಸಂದರ್ಭಗಳಲ್ಲೂ ಏಳು ಬೀಳುಗಳನ್ನು ಕಂಡಿದ್ದು ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಆಗುತ್ತದೆ ಎಂದು ಭವಿಷ್ಯ ನುಡಿದರು.
ಕಾರ್ಯಕ್ರಮದಲ್ಲಿ ಕೌಜಲಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ ಅರಳಿ, ಅರಬಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಮಗದುಮ, ಕಿಸಾನ್ ಘಟಕದ ಅಧ್ಯಕ್ಷ ವೆಂಕನಗೌಡ ಪಾಟೀಲ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮಾಮ್ ಹುನ್ನೂರ, ರೈತ ಮುಖಂಡ ಸುರೇಶ ನಾಯಕ, ರವಿ ಮೂಡಲಗಿ, ಲಕ್ಕಪ್ಪ ಶಾಬನ್ನವರ, ಚಂದ್ರು ನಾಯಿಂಗ್ಲಜ, ಬೀರಪ್ಪ ಬಳೋಲದಾರ, ಸುಲ್ತಾನ್ ಮುಲ್ತಾನಿ, ಶೌಕತ್ ಮುಲ್ತಾನಿ, ಬಸಪ್ಪ ಸಣ್ಣಕ್ಕಿ, ಬಾಬುಲಾಲ್ ಮುನ್ಯಾಳ, ತಿಮ್ಮಣ್ಣ ಕೋಳಿಗುಡ್ಡ, ರಾಮಚಂದ್ರ ಮುಳವಾಡ, ಸೇವಾದಳದ ಸಂಚಾಲಕ ಮೀರಾಸಾಬ್ ಅನುಸಾರಿ, ಗುರುನಾಥ್ ಉಪ್ಪಾರ, ಜಡೆಪ್ಪ ಮಾರಾಪುರ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅತೀ ಹುರುಪಿನಿಂದ ಚುನಾವಣೆ ಕಾರ್ಯದಲ್ಲಿ ತೊಡಗಿದ್ದು, ಅದರ ಫಲವೆಂಬಂತೆ ಚಿಕ್ಕೋಡಿಯಲ್ಲಿ ಸಹೋದರಿ ಪ್ರಿಯಾಂಕಾ ಜಾರಕಿಹೊಳಿ ಜಯಭೇರಿ ಬಾರಿಸಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಸೋಲಿನ ಕುರಿತು ಆತ್ಮಾವಲೋಕನ ಮಾಡಬೇಕಾಗಿದೆ.
-ಅನಿಲಕುಮಾರ ದಳವಾಯಿ, ಮೂಡಲಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು.