ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಎ.ಎಸ್. ಪೊನ್ನಣ್ಣ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕೊಠಡಿಯಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನಾಪೋಕ್ಲು : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಎ.ಎಸ್. ಪೊನ್ನಣ್ಣ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕೊಠಡಿಯಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಕಾವೇರಿ ನೀರಾವರಿ ನಿಗಮ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯ ಕುರಿತು ಪರಿಶೀಲನೆ ನಡೆಸಿ, ಬಾಕಿ ಇರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಆರ್.ಡಿ.ಪಿ.ಆರ್. ಇಲಾಖೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ ಹಾಗೂ ನಿವೇಶನ ಹಂಚಿಕೆ ಬಗ್ಗೆ ಹಾಗೂ ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಭೆಯಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು ಇದ್ದರು.