ಸಾರಾಂಶ
ಪ್ರಗತಿ ಪರಿಶೀಲನಾ ಸಭೆ । ಅಧಿಕಾರಿಗಳಿಗೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸೂಚನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಅಲೆಮಾರಿ ಸಮುದಾಯದಗಳ ಜನರು ಸಮಾಜದಲ್ಲಿ ಅತಿ ಹಿಂದುಳಿದಿದ್ದು ಅವರಿಗೆ ಸರ್ಕಾರದ ಯೋಜನೆಯ ಲಾಭ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯರೊಂದಿಗೆ ಜರುಗಿದ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದರು.
ಅಲೆಮಾರಿ ಸಮುದಾಯಗಳ ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಇರಲು ಸರಿಯಾದ ಮನೆಯಿಲ್ಲ. ರೇಷನ್ ಕಾರ್ಡ್ ಇಲ್ಲ. ಹೀಗೆ ಹಲವಾರು ಸಮಸ್ಯೆಗಳು ಇವೆ. ಅಲೆಮಾರಿ ಸಮುದಾಯದ ಜನರು ನಮ್ಮಂತೆ ಮನುಷ್ಯರು ಅಲ್ವಾ, ಅವರ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದರು.ಅಲೆಮಾರಿ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡಬೇಕು. ಅಧಿಕಾರಿಗಳು ಒಂದು ಬಾರಿಯೂ ನಮಗೆ ಭೇಟಿಯಾಗಿಲ್ಲ. ನಮ್ಮ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಹಲವಾರು ದೂರುಗಳು ನಮಗೆ ಬಂದಿವೆ. ಜಿಲ್ಲೆಯಲ್ಲಿ 43 ಸಾವಿರಕ್ಕಿಂತ ಹೆಚ್ಚಿನ ಅಲೆಮಾರಿ ಸಮುದಾಯಗಳ ಜನರು ಇದ್ದಾರೆ ಎಂದು ಹೇಳಿದರು.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಎಷ್ಟು ಜನ ಅಲೆಮಾರಿಗಳಿಗೆ ಭೂಮಿ ಮತ್ತು ಮನೆ ಇಲ್ಲದವರನ್ನು ಗುರುತಿಸಲಾಗಿದೆ. ಕಳೆದ 3 ವರ್ಷಗಳಿಂದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಯಾವುದೇ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಜಿಲ್ಲೆಯಲ್ಲಿ ನೀಡಿಲ್ಲ. ಶಾಲೆಯಲ್ಲಿ ಕಲಿಯುವ ಅಲೆಮಾರಿ ಮಕ್ಕಳಿಗೆ ವಸತಿ ನಿಲಯಗಳಲ್ಲಿ ಇರಲು ಶೇ. 10 ಪ್ರತಿಶತ ಮೀಸಲಾತಿ ಇದೆ. ಇದನ್ನು ಹೆಚ್ಚಿಸಲು ನಮ್ಮ ನಿಗಮದಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಸಾಮಾಜಿಕ ಪ್ರಜ್ಞೆ ಇಲ್ಲದ ಸಣ್ಣ-ಸಣ್ಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ಅಲೆಮಾರಿ ಅಭಿವೃದ್ಧಿ ಕೋಶದಿಂದ ಈಗ ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತನೆ ಮಾಡಿದೆ. ಪಾರದರ್ಶಕವಾಗಿ ನಮ್ಮ ನಿಗಮದಿಂದ ಫಲಾನುಭವಿಗಳಿಗೆ ಸರ್ಕಾರದ ಲಾಭ ಸಿಗಬೇಕು. ಪ್ರತಿವರ್ಷ ನಮ್ಮ ನಿಗಮದಿಂದ ಆನಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗುತ್ತದೆ. ಸ್ವಾತಂತ್ರ್ಯ ಸಿಕ್ಕು 78 ವರ್ಷಗಳಾದರು ಇನ್ನೂ ಅಲೆಮಾರಿ ಸಮಾಜ ನಿರ್ಲಕ್ಷಿತ ಸಮುದಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜೆ. ನಗರದಲ್ಲಿ ಅಲೆಮಾರಿ ಸಮುದಾಯಗಳ ಜನರು ವಾಸಿಸುವ ಕಾಲನಿಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಆಲಿಸಿದರು.ಜಿಲ್ಲಾಧಿಕಾರಿ ನಲಿನ್ ಅತುಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಆನಂದ ಏಕಲವ್ಯ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಹೆಚ್ಚುವರಿ ಎಸ್ಪಿ ಹೇಮಂತ ಕುಮಾರ, ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಅಲೆಮಾರಿ ಸಮುದಾಯದ ಮುಖಂಡರು ಇದ್ದರು.