ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ

| Published : Jan 03 2024, 01:45 AM IST

ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು, ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಗದಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು ಅದನ್ನು ಸಮರ್ಪಕವಾಗಿ ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು. ಅ‍ವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ವರ್ಷದ ಆರ್ಥಿಕ ವರ್ಷದ ಅಂತ್ಯದೊಳಗಾಗಿ ಇಲಾಖಾವಾರು ನೀಡಲಾದ ಆರ್ಥಿಕ ಭೌತಿಕ ಗುರಿ ಸಾಧನೆ ಆಗಬೇಕು. ಅನಗತ್ಯ ವಿಳಂಬ ಮಾಡಿ ಅನುದಾನ ಮರಳಿ ಹೋದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರಿಸಿದ ಅನುದಾನವು ಅವರಿಗೆ ತಲುಪಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರುವಂತೆ ನಿಗಾ ವಹಿಸಲು ಸೂಚಿಸಿದ ಅವರು ಯಾವುದೇ ಕಾರಣಕ್ಕೂ ಅನಗತ್ಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದರು.

ಅರ್ಹ ಫಲಾನುಭವಿಗಳಿಗೆ ನೀಡುವ ಸೌಲಭ್ಯಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಂಡು ವಿತರಣೆ ಮಾಡಬೇಕು. ಹಾಗೂ ನಿರ್ದಿಷ್ಟ ಸಮುದಾಯದ ಕಾಲೋನಿಗಳಲ್ಲಿಯೇ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಖಚಿತಪಡಿಸಿಕೊಂಡು ಕಾಮಗಾರಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ 2023-24 ನೇ ಸಾಲಿನ ನವೆಂಬರ್ 30ರ ಅಂತ್ಯದವರೆಗೆ ಎಸ್‍ಸಿ ಎಸ್‍ಪಿ ಯೋಜನೆಯಡಿ ಜಿಲ್ಲೆಗೆ ವಿವಿಧ ಇಲಾಖೆಗಳಿಗೆ ಒಟ್ಟಾರೆ 3543.56 ಲಕ್ಷ ಬಿಡುಗಡೆಯಾಗಿದೆ. ಆ ಪೈಕಿ 2985.50 ಲಕ್ಷ ಖರ್ಚಾಗಿದ್ದು 40325 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುತ್ತಾರೆ.

ಟಿ.ಎಸ್.ಪಿ.ಯೋಜನೆಯಡಿ ನವೆಂಬರ್ 30 ರ ಅಂತ್ಯದವರೆಗೆ ವಿವಿಧ ಇಲಾಖೆಗಳಿಗೆ 1193.80 ಲಕ್ಷ ಬಿಡುಗಡೆಯಾಗಿದ್ದು ಆ ಪೈಕಿ 908.56 ಲಕ್ಷ ಖರ್ಚಾಗಿರುತ್ತದೆ. 25637 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಎಂ.ಬಿ.ಸಂಕದ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗಂಗಪ್ಪ ಎಂ, ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಮಹಾಂತೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.