ಗ್ಯಾರಂಟಿ ಯೋಜನೆ ಪ್ರಾಮಾಣಿಕವಾಗಿ ತಲುಪಿಸಿ: ಎಂ.ಎಂ. ಮೈದೂರ

| Published : May 30 2025, 12:33 AM IST

ಸಾರಾಂಶ

ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಶಕ್ತಿ ಯೋಜನೆಯಿಂದ ಬಂದಿರುವ ಲಾಭ ಮತ್ತು ಮಹಿಳಾ ಪ್ರಯಾಣಿಕರ ಸಂಖ್ಯೆಯನ್ನು ಸಭೆಗೆ ತಿಳಿಸಿದರು.

ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕಾಧ್ಯಕ್ಷ ಎಂ.ಎಂ. ಮೈದೂರ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಬಗ್ಗೆ ಮಾಹಿತಿಯನ್ನು ಕೇಳಿದ ಅಧ್ಯಕ್ಷರು, ನಗರ ಮತ್ತು ಹಳ್ಳಿ ಪ್ರದೇಶದಲ್ಲಿ ಹೆಚ್ಚು ಒತ್ತು ಕೊಡುವಂತೆ ಹಾಗೂ ಯುವ ನಿಧಿಯಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ ಕಡಿಮೆ ಇದ್ದು ಹಾಗೂ ಯುವನಿಧಿ ಬಗ್ಗೆ ಮಾಹಿತಿ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅನ್ನಭಾಗ್ಯ ಯೋಜನೆ ಅಡಿ ಡಿಬಿಟಿ ಹಣ ವರ್ಗಾವಣೆ ಆಗದೆ ಇರುವುದು ಮತ್ತು ಹೊಸ ರೇಷನ್ ಕಾರ್ಡ್‌ಗಳ ಮಾಹಿತಿಯನ್ನು ನೀಡಲು, ರೇಷನ್ ವಿತರಣೆಯಲ್ಲಿ ಸಾಮಗ್ರಿಗಳ ಗುಣಮಟ್ಟತೆ ಕಾಪಾಡಿಕೊಂಡು ಹೋಗಲು ಹಾಗೂ ನ್ಯಾಯಬೆಲೆ ಅಂಗಡಿಗಾರರ ಸಭೆ ಕರೆದಾಗ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರನ್ನು ಕಡ್ಡಾಯವಾಗಿ ಸಭೆಗೆ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಸರಬರಾಜು ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ವರದಿಯನ್ನು ಸಭೆಗೆ ಮಂಡಿಸಿದರು. ಹೊಸದಾಗಿ ಸಂಪರ್ಕ ಪಡೆದವರಿಗೆ 58 ಯೂನಿಟ್ ಉಚಿತ ವಿದ್ಯುತ್ ಹಾಗೂ ಹಳೆ ಮೀಟರ್ ಇರುವವರಿಗೆ ಆರು ತಿಂಗಳ ಸರಾಸರಿ ಆಧಾರದ ಮೇಲೆ 200 ಯೂನಿಟ್ ವಿದ್ಯುತ್ ಉಚಿತವಾಗಿರುವ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವರದಿ ಮಂಡಿಸಿದರು. ಅದಕ್ಕೆ ಅಧ್ಯಕ್ಷರು, ತೆರಿಗೆ ಪಾವತಿಸದೆ ಇರುವ ಕುಟುಂಬಕ್ಕೆ ಗೃಹಲಕ್ಷ್ಮೀ ಹಣ ಬಂದಿಲ್ಲ. ಇದರ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಶಕ್ತಿ ಯೋಜನೆಯಿಂದ ಬಂದಿರುವ ಲಾಭ ಮತ್ತು ಮಹಿಳಾ ಪ್ರಯಾಣಿಕರ ಸಂಖ್ಯೆಯನ್ನು ಸಭೆಗೆ ತಿಳಿಸಿದರು. ಆಗ ಅಧ್ಯಕ್ಷರು ಬಸ್ ನಿಲ್ದಾಣಗಳ ಸ್ವಚ್ಛತೆ ಮತ್ತು ಅವುಗಳ ನಿರ್ವಹಣೆ ಮತ್ತು ಕಡಿಮೆ ಬಸ್ ಸಂಚಾರ ಇರುವ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನೀಡಿ ಮಹಿಳೆಯರಿಗೆ ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸದಸ್ಯ ಕಾರ್ಯದರ್ಶಿ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ಹುಬ್ಬಳ್ಳಿ, ಗ್ಯಾರಂಟಿ ಯೋಜನೆಗಳ ಸದಸ್ಯರು ಮತ್ತು ತಾಲೂಕು ಮಟ್ಟದ ಐದು ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಯೋಜನಾಧಿಕಾರಿಗಳು ಇದ್ದರು.