ಲ್ಲೆಯ ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಕಾಮಗಾರಿಗಳ ವೇಗ, ಆಡಳಿತಾತ್ಮಕ ವಿಚಾರ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು
ಹೊಸಪೇಟೆ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು, ಅಭಿವೃದ್ಧಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಜನಪರ ಆಡಳಿತಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಮಂಗಳವಾರ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಚಿವರು, ಶಾಸಕ ಎಚ್.ಆರ್.ಗವಿಯಪ್ಪ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿ ಮಾತನಾಡಿದರು.ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.
ವಿಜಯನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ ಜ್ವಲಂತ ಸಮಸ್ಯೆ, ಜನರು ಎದುರಿಸುತ್ತಿರುವ ತೊಂದರೆ, ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಹಾಗೂ ಅವುಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಸಮಾಲೋಚನೆ ನಡೆಯಿತು.ಅಲ್ಲದೆ, ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಕಾಮಗಾರಿಗಳ ವೇಗ, ಆಡಳಿತಾತ್ಮಕ ವಿಚಾರ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ವ್ಯವಸ್ಥೆ ರೂಪಿಸುವುದು ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವ ಅಗತ್ಯದ ಬಗ್ಗೆಯೂ ಅಭಿಪ್ರಾಯ ವಿನಿಮಯ ನಡೆಯಿತು.
ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಡುವೆ ನಿರಂತರ ಸಮನ್ವಯ ಇರಬೇಕು. ಸ್ಥಳೀಯ ಅಗತ್ಯ ಗುರುತಿಸಿ ಆದ್ಯತೆಯ ಮೇರೆಗೆ ಯೋಜನೆ ಅನುಷ್ಠಾನಗೊಳಿಸುವ ಮೂಲಕ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹಾಗೂ ಎಸ್ಪಿ ಎಸ್.ಜಾಹ್ನವಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.