ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ನೀಡಿ ನಂತರ 56437 ಹುದ್ದೆಗಳನ್ನು ಭರ್ತಿ ಮಾಡುವಂತೆ ಹಾಗೂ ಎಸ್ಸಿ-ಎಸ್ಟಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಮಾಯಿಸಿದ ಸಮುದಾಯದ ಮುಖಂಡರು ಮೀಸಲಾತಿ ನಮ್ಮ ಹಕ್ಕು, ಭಿಕ್ಷೆಯಲ್ಲ ಎಂಬ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ರವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಮುಖಂಡರಾದ ಕುಪ್ಪೂರು ಶ್ರೀಧರ್ ಅವರು, ರಾಜ್ಯ ಸರ್ಕಾರ 2022 ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. 7 ರಷ್ಟು ರಾಜ್ಯ ಸರ್ಕಾರ ಹೆಚ್ಚಿಸಿದೆ. ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸದೆ ನಿರ್ಲಕ್ಷ್ಯ ತೋರಿದ್ದು, ಅತಿ ಶೀಘ್ರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನದ 9ನೇ ಅಧಿಸೂಚಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಪ್ರಸ್ತುತ ರಾಜ್ಯ ಸರ್ಕಾರ ಸುಮಾರು 56,437 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದು ಸರಿಯಷ್ಟೆ. ಆದರೆ 2022 ರಲ್ಲಿ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಹೆಚ್ಚಿಸಿರುವ ಮೀಸಲಾತಿಯನ್ನು ಕೈಬಿಟ್ಟು ಹಳೆಯ ಮಾದರಿಯ ಮೀಸಲಾತಿ ಅಡಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಎಸ್ಸಿ ಹಾಗೂ ಎಸ್ಟಿ ಸಮುದಾಯಗಳು ಖಂಡಿಸುತ್ತವೆ. 2022ರ ಮೀಸಲಾತಿ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಶೇ. 56 ರಷ್ಟು ಮೀಸಲಾತಿ ಆಗುವವರೆಗೂ ಯಾವುದೇ ನೇಮಕಾತಿ ಮಾಡಬಾರದು ಎಂದು ಒತ್ತಾಯಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಮುಖಂಡರುಗಳಾದ ಸಿಂಗದಹಳ್ಳಿ ರಾಜಕುಮಾರ್, ನಿವೃತ್ತ ಅಬಕಾರಿ ಅಧಿಕಾರಿ ನಾಗರಾಜು, ನಿವೃತ್ತ ಬಿಇಓ ಪಿ.ಬಿ. ಬಸವರಾಜು, ರಾಮಚಂದ್ರಪ್ಪ, ಸೋಲಾರ್ ರಾಜು, ವಿದ್ಯಾರ್ಥಿ ಘಟಕದ ನವೀನ್, ಮಂಜುನಾಥ್, ಕುಂದೂರು ಮುರುಳಿ, ನಾಗರಾಜು, ಅಡವೀಶಸ್ವಾಮಿ, ಪುರುಷೋತ್ತಮ, ಶಿವಕುಮಾರ್, ಪ್ರಕಾಶ್ ಹೆಚ್., ಸರಸ್ವತಿ, ಯಶೋಧಮ್ಮ, ಯೋಗೇಂದ್ರಬಾಬು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.