ಸಾರಾಂಶ
ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಅನ್ಯರಾಜ್ಯದ ಸಿಬ್ಬಂದಿ ಅವರು ವೃತ್ತಿಗೆ ಸೇರಿದ ೬ ತಿಂಗಳ ಒಳಗೆ ಕಡ್ಡಾಯ ಕನ್ನಡ ಭಾಷೆಯನ್ನು ಕಲಿತು ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಸುತ್ತೋಲೆ ಹೊರಡಿಸುವವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕದಲ್ಲಿರುವ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಅನ್ಯರಾಜ್ಯದ ಸಿಬ್ಬಂದಿ ಅವರು ವೃತ್ತಿಗೆ ಸೇರಿದ ೬ ತಿಂಗಳ ಒಳಗೆ ಕಡ್ಡಾಯ ಕನ್ನಡ ಭಾಷೆಯನ್ನು ಕಲಿತು ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಸುತ್ತೋಲೆ ಹೊರಡಿಸುವವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.ಇತ್ತೀಚಿಗೆ ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕಿ ಪ್ರಿಯಾಂಕ ಸಿಂಗ್ ಎಂಬವರು ‘ನಾನು ಕನ್ನಡದಲ್ಲಿ ಮಾತನಾಡುವುದಿಲ್ಲ, ಇದು ಭಾರತ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ, ಬೇಕಿದ್ದರೆ ಬನ್ನಿ’ ಎಂದು ಗ್ರಾಹಕರಲ್ಲಿ ವಾದ ಮಾಡಿದ್ದು, ಇದು ಸರ್ವ ಕನ್ನಡಿಗರಿಗೆ ನೋವುಂಟು ಮಾಡಿದೆ ಎಂದು ಅವರು ಉಲ್ಲೇಖಿಸಿದ್ದಾರೆ.ಪ್ರಧಾನಮಂತ್ರಿ ಹಲವಾರು ಬಾರಿ, ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಸ್ಥಳೀಯ ಆಡಳಿತಾತ್ಮಕ ಭಾಷೆಯಲ್ಲಿಯೇ ವ್ಯವಹರಿಸಬೇಕೆಂದು ನಿರ್ದೇಶನ ನೀಡಿದ್ದಾರೆ. ಆದರೂ ಕೆಲವು ರಾಷ್ಟ್ರೀಕೃತ ಬ್ಯಾಂಕಿನ ಸಿಬ್ಬಂದಿ ಕನ್ನಡದ ಬಗ್ಗೆ ಅಗೌರವವನ್ನು ತೋರಿ ಬ್ಯಾಂಕಿನ ಗ್ರಾಹಕರಿಗೆ ಕಿರುಕುಳವನ್ನು ಕೊಡುತ್ತಿರುವುದು ಬಹಳ ನೋವನ್ನುಂಟು ಮಾಡಿದೆ.ಕೇಂದ್ರ ಲೋಕಸೇವಾ ಆಯೋಗದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಸೇವೆ ಸಲ್ಲಿಸುವಾಗ ಕನ್ನಡ ಭಾಷೆಯನ್ನು ಕಲಿತು ವ್ಯವಹರಿಸುವಂತೆ ಕೇಂದ್ರ ಲೋಕಸೇವಾ ಆಯೋಗ ಕಾನೂನನ್ನೇ ಮಾಡಿರುತ್ತದೆ. ಅದ್ದರಿಂದ ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿ ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡವನ್ನು ಕಲಿತು ವ್ಯವಹರಿಸಬೇಕು. ಹಾಗೇ ಮಾಡಲೊಪ್ಪದ ಸಿಬ್ಬಂದಿ ಮತ್ತು ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದಕ್ಕೂ ಆದೇಶ ಹೊರಡಿಸಬೇಕು ಎಂದು ಸಂಸದರು ಪತ್ರದ ಮುಖೇನ ಸಚಿವೆಯನ್ನು ಆಗ್ರಹಿಸಿದ್ದಾರೆ.