ಸಾರಾಂಶ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಾಮರಾಜನಗರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಬ್ಲ್ಯೂ ಇಲಾಖೆಯ ಹೊರಗುತ್ತಿಗೆ ನೌಕರನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಇದಕ್ಕೆ ಕಾರಣ ಕರ್ತರಾದ ಗುಣಮಟ್ಟ ನಿಯಂತ್ರಣ ಘಟಕದ ಎಇಇ ಬಂಧಿಸಬೇಕು ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಇಇ ರೂಪ ಮೇಲೆ ಎಫ್ಐಆರ್ ಆಗಿದ್ದರೂ ಬಂಧಿಸಿಲ್ಲ. ಜೊತೆಗೆ ಬಂಧನದ ವೇಳೆ ಹೊರಗುತ್ತಿಗೆ ನೌಕರ ಹೇಳಿಕೆಯಲ್ಲಿ ಎಇಇ ಪಾತ್ರದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಕೂಡಲೇ ಲೋಕಾಯುಕ್ತ ಅಧಿಕಾರಿಗಳು ಎಇಇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.ಜಿಲ್ಲೆಯಲ್ಲಿ ಹಲವು ಪ್ರಕರಣಗಳಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿ ಬಿದ್ದಿರುವ ಹೊರಗುತ್ತಿಗೆ ನೌಕರರ ಬಂಧನದ ಜೊತೆಗೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ಎಇಇ ಅವರನ್ನು ಬಂಧಿಸದಿರುವುದು ಲೋಕಾಯುಕ್ತ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಆರೋಪಿಸಿದರು.
ಹೊರಗುತ್ತಿಗೆ ನೌಕರ ಹಾಗೂ ಎಇಇ ಅಧಿಕಾರಿಯನ್ನು ಮೊಬೈಲ್ಗಳನ್ನು ಪರಿಶೀಲಿಸಿ ಲೋಕಾಯುಕ್ತ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಎಇಇ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಷ್ಟ್ರಪತಿ, ರಾಜ್ಯಪಾಲರು, ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.ಸುದ್ದಿಗೋಷ್ಟಿಯಲ್ಲಿ ಎಸ್ಸಿ, ಎಸ್ಟಿ ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಕೆ.ಮಂಜುನಾಥ್, ಗುತ್ತಿಗೆದಾರರಾದ ಪರ್ವತ್ ರಾಜ್, ಅಸ್ಲಾಂ ಷರೀಪ್, ಶಿವರಾಜು, ಮಹದೇವಸ್ವಾಮಿ ಇದ್ದರು.