ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿಎದುರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಬಿಜೆಪಿ ಮುಖಂಡರು,ರೈತರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಮಳೆ ಕೊರತೆಯಿಂದ ಜಿಲ್ಲೆಯಲ್ಲೀ ಬರದ ಛಾಯೆ ಆವರಿಸಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಬರಬೇಕು. ತುಂಗಭದ್ರಾ ನದಿ ಪಾತ್ರದ ಪ್ರದೇಶದಲ್ಲಿ ರೈತರು ಈಗಾಗಲೇ ಭತ್ತದ ಸಸಿ ಮಡಿ ಮಾಡಿದ್ದು ಅವುಗಳು ಒಣಗುತ್ತಿವೆ. ನೀರಿನ ಕೊರತೆಯಿಂದ ಬೆಳೆ ಒಣಗುವ ಸ್ಥಿತಿ ನಿರ್ಮಾಣವಾಗಿದೆ. ಜಲಾಶಯದಲ್ಲಿ ನೀರಿನ ಲಭ್ಯತೆ ಆಧಾರದ ಮೇಲೆ ಕಾಲುವೆಗಳಿಗೆ ನೀರು ಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.ವಿಪ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ರೈತರ ಹಿತಾಸಕ್ತಿ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಬರ ಆವರಿಸಿದ್ದರೂ ಶಾಸಕರು ಸಂಸದರು ಈ ಕುರಿತು ಯಾವುದೆ ಕ್ರಮ ಕೈಗೊಂಡಿಲ್ಲ. ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ತುಂಗಭದ್ರಾ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ರೈತರಿಗಾಗುವ ನಷ್ಟ ಭರಿಸಬೇಕು ಇಲ್ಲದಿದ್ದರೆ ಹೋರಾಟ ಮತ್ತೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ್ ಮಾತನಾಡಿ, ಮಳೆ ಕೊರತೆ ಹಾಗೂ ನೀರಿನ ಅಭಾವದಿಂದ ಬೆಳೆಗಳಿಗೆ ಅಪಾಯ ಎದುರಾಗಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳದಿದ್ದರೆ ರೈತರ ಕಷ್ಟ ಹೆಚ್ಚಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರ ಹಿತದೃಷ್ಟಿಯಿಂದ ಯಾವುದೇ ವಿಳಂಬ ಮಾಡದೆ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ಸರ್ಕಾರ ರೈತರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಬಿಜೆಪಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ಧಡೇಸ್ಗೂರು, ಡಾ. ಬಸವರಾಜ ಕ್ಯಾವಟರ್, ಶರಣು ತಳ್ಳಿಕೇರಿ, ಬಸವರಾಜ ಗೌರಾ, ಅಪ್ಪಣ್ಣ ಪದಕಿ, ಚಂದ್ರು ಕವಲೂರು, ಕೀರ್ತಿ ಪಾಟೀಲ್, ಸುನೀಲ ಹೆಸರೂರು ಇತರರಿದ್ದರು.