ಸಾರಾಂಶ
ಕನ್ನಡಪ್ರಭ ವಾರ್ತೆ ಬೈಲಹೊಂಗಲ
ರೈತರಿಗೆ ಸಮರ್ಪಕವಾಗಿ ಬೀಜ, ಗೊಬ್ಬರ ವಿತರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಒಕ್ಕೂಟದಿಂದ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಸಂಘಟನೆ ರಾಜ್ಯಾಧ್ಯಕ್ಷ ಬೀರಪ್ಪ ದೇಶನೂರ, ಮುಖಂಡರಾದ ಬಸವರಾಜ ಮೊಖಾಶಿ, ಸುರೇಶ ವಾಲಿ ಮಾತನಾಡಿ, ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಪ್ರಸ್ತುತ ಕಬ್ಬು ಬೆಳೆಗೆ ಯೂರಿಯಾ ಗೊಬ್ಬರ ಅತಿ ಅವಶ್ಯವಾಗಿ ಬೇಕಾಗಿದೆ. ಯೂರಿಯಾ ಜೊತೆ ಬೇರೆ ಗೊಬ್ಬರ ಬೇರಿಸಿ ಕೊಡುತ್ತಿದ್ದಿರಿ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದರು. ಬೆಳಗಾವಿಯ ಕೃಷಿ ಇಲಾಖೆಯ ಮೇಲಾಧಿಕಾರಿಗಳು ಬರುವವರೆಗೆ ಪ್ರತಿಭಟನೆ ಬಿಡಲ್ಲ ಎಂದು ಪಟ್ಟು ಹಿಡಿದರು. ಆಗ ಬೆಳಗಾವಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಬೈಲಹೊಂಗಲದ ಸಹಾಯಕ ಕೃಷಿ ನಿರ್ದೇಶಕರು ಕಚೇರಿಗೆ ಭೇಟಿ ನೀಡಿ, ಯೂರಿಯಾ ಗೊಬ್ಬರ ಸಾಕಷ್ಟು ದಾಸ್ತಾನು ಇದೆ. ಎಲ್ಲ ರೈತರಿಗೂ ವಿತರಿಸುತ್ತೇವೆ. ರೈತರು ನಮಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ ಮಾತನಾಡಿ, ರೈತರಿಗೆ ಯಾವುದೇ ತೊಂದರೆ ಆಗದ ಹಾಗೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಎಲ್ಲ ರೈತರಿಗೆ ಗೊಬ್ಬರ, ಬೀಜ ದೊರೆಯುವಂತೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಜೀವಕುಮಾರ ತಿಲಗರ, ಮಹಾಂತೇಶ ಅಂಗಡಿ, ರುದ್ರಪ್ಪ ಕೊಡ್ಲಿ, ಮಡಿವಾಳಪ್ಪ ಪಟ್ಟಣಶೆಟ್ಟಿ ಹಾಗೂ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.