ಹೊಸಪೇಟೆ: ಹಾಸ್ಟೆಲ್ ಹಾಗೂ ವಸತಿ ನಿಲಯಗಳ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಹಾಗೂ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಜವಾನರು, ನರ್ಸ್ ಗಳು, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ ಕಳೆದ 15-20 ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದು ಅವರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ಜಾರಿ ಮಾಡದೇ ವಿಳಂಬ ಮಾಡುತ್ತಿದ್ದು, ಕೂಡಲೇ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು. ಎಲ್ಲ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ, ಖಾಯಂ ಮಾಡಬೇಕು. ಪಿಎಫ್‌ ಇಎಸ್‌ಐ ಕಟ್ಟದೆ ಇರುವ ಖಾಸಗಿ ಏಜೆನ್ಸಿ ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಬೀದರ್ ಮಾದರಿ ಸೊಸೈಟಿಯನ್ನು ತಕ್ಷಣ ಪ್ರಾರಂಭ ಮಾಡಬೇಕು. ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕಿರುಕುಳ ಕೊಡುವ ವಾರ್ಡನ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ್ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು ಎಂದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕೆಲಸ ಮಾಡುವ ಪ್ರ.ದ. ಸ ಮತ್ತು ಸ್ಟಾಪ್ ನರ್ಸ್ ಹಾಗೂ ಡಿ-ಗ್ರೂಪ್ ಗಳಿಗೆ ಸೇವಾ ಭದ್ರತೆ ನೀಡಬೇಕು. ಪ್ರಥಮ ದರ್ಜೆ ಸಹಾಯಕರನ್ನು ಏಪ್ರಿಲ್-ಮೇ ನಲ್ಲಿ ಶಾಲೆಯ ಕೆಲಸ ವಿರುವ ಕಾರಣ ಮುಂದುವರೆಸಿಬೇಕು. ಎಲ್ಲ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ಸಂಜೀವಿನಿ ಕಾರ್ಡ್ ಕೊಡಬೇಕು. ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಬಾರದು ಎಂದರು.

ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾಧ್ಯಕ್ಷ ಮರಡಿ ಜಂಬಯ್ಯ ನಾಯಕ, ಮುಖಂಡರಾದ ತಾಯಪ್ಪ ನಾಯಕ, ನಾಗುನಾಯ್ಕ, ಸೂರ್ಯನಾರಾಯಣ, ಈರಣ್ಣ, ಗದಿಗಪ್ಪ, ಬಸವರಾಜ, ನಿಂಗಣ್ಣ, ಮಂಗಳ, ಮಮತಾ, ಹುಲಿಗಮ್ಮ, ರಾಧ, ಗೌರಮ್ಮ ಒತ್ತಾಯಿಸಿದ್ದಾರೆ.