ಸಮಾನ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ

| Published : May 26 2025, 01:06 AM IST

ಸಾರಾಂಶ

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ೨೯ರಂದು ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ೩೦ರಂದು ಜಿಲ್ಲಾಮಟ್ಟದಲ್ಲಿ ತರಗತಿ ಬಹಿಷ್ಕಾರ ಮಾಡುತ್ತೇವೆ. ೩೧ರಂದು ಪಾದಯಾತ್ರೆ ನಡೆಸಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಇಷ್ಟಕ್ಕೂ ಸೂಕ್ತ ರೀತಿಯ ಸ್ಪಂದನೆ ಸಿಗದೇ ಹೋದರೆ ಜೂ. ೨ರಿಂದ ರಾಜ್ಯಾದ್ಯಂತ ಡಿಸಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ವಿವರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಗೂ ತಮ್ಮನ್ನೂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು, ಕರ್ನಾಟಕ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದಿಂದ ಇದೇ ತಿಂಗಳ ೨೬ರಿಂದ ಜೂನ್ ೨ರವರೆಗೂ ವಿವಿಧ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಸರಣಿ ಹೋರಾಟದ ರೂಪುರೇಷೆ ವಿವರಿಸಿದ ಜಿಲ್ಲಾ ಸಂಘದ ಅಧ್ಯಕ್ಷೆ ಉಷಾ ಸಿ.ಎನ್, ಮೇ ೨೬ರಿಂದ ೨೮ರವರೆಗೆ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ೨೯ರಂದು ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ೩೦ರಂದು ಜಿಲ್ಲಾಮಟ್ಟದಲ್ಲಿ ತರಗತಿ ಬಹಿಷ್ಕಾರ ಮಾಡುತ್ತೇವೆ. ೩೧ರಂದು ಪಾದಯಾತ್ರೆ ನಡೆಸಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಇಷ್ಟಕ್ಕೂ ಸೂಕ್ತ ರೀತಿಯ ಸ್ಪಂದನೆ ಸಿಗದೇ ಹೋದರೆ ಜೂ. ೨ರಿಂದ ರಾಜ್ಯಾದ್ಯಂತ ಡಿಸಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ವಿವರಿಸಿದರು.ಬೇರೆ ವಸತಿ ಶಾಲೆಗಳ ಶಿಕ್ಷಕರಿಗೆ ಹೋಲಿಸಿದರೆ ನಾವು ಅನೇಕ ರೀತಿಯ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಅವುಗಳನ್ನು ಈಡೇರಿಸಿ ಎಂದು ರಾಜ್ಯಾದ್ಯಂತ ಕ್ರೈಸ್‌ ಸಂಸ್ಥೆಯಡಿ ಇರುವ ಸುಮಾರು ೬೮೦೦ ಮಂದಿ ಇರುವ ಕಾಯಂ ಶಿಕ್ಷಕರು ಕಳೆದ ೧೩ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ, ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದರು.ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಬಡ ಪ್ರತಿಭಾವಂತ ಮಕ್ಕಳು ಓದುತ್ತಿರುವ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊದಲಾದ ವಸತಿ ಶಾಲೆಗಳಲ್ಲಿ ಕಲಿಯುತ್ತಿದ್ದು, ಓದುವುದರಿಂದ ಹಿಡಿದು, ಪ್ರತಿಭಾ ಕಾರಂಜಿ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಮ್ಮ ಶಾಲೆಗಳ ಮಕ್ಕಳೇ ಉತ್ತಮ ಪ್ರತಿಭೆ ಪ್ರದರ್ಶನ ಮಾಡುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಶಾಲೆಯ ಮಕ್ಕಳೂ ರಾಜ್ಯಮಟ್ಟದ ರ್‍ಯಾಂಕ್ ಪಡೆಯುತ್ತಿದ್ದಾರೆ. ನಾವು ನೀಡುವ ಗುಣಾತ್ಮಕ ಶಿಕ್ಷಣದಿಂದ ಸರ್ಕಾರಿ ಶಾಲೆಗಳಿಗಿಂತಲೂ ನಮ್ಮ ಶಾಲೆಗಳ ಫಲಿತಾಂಶ ಶೇ.೯೧ಕ್ಕಿಂತಲೂ ಅಧಿಕ ಇದೆ. ಇದಕ್ಕೆ ನಾವು ೨೪*೭ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದೂ ಕಾರಣ. ಆದರೂ ನಮಗೆ ಕೊಡಬೇಕಾದ ಸೌಲಭ್ಯ ಕೊಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು. ನಾವು ೬-೧೦ ನೇ ತರಗತಿ ವರೆಗೂ ಬೋಧನೆ ಮಾಡುತ್ತಿದ್ದೇವೆ. ಗುಣಮಟ್ಟ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವುದರಿಂದ ೫೨ ಸಾವಿರ ಮಕ್ಕಳು ಸಾಮರ್ಥ್ಯದ ವಸತಿ ಶಾಲೆಗಳ ಪ್ರವೇಶಕ್ಕಾಗಿ ಬರೋಬ್ಬರಿ ೨.೭೦ಲಕ್ಷ ಅರ್ಜಿ ಬಂದಿವೆ. ಒಟ್ಟಾರೆಯಾಗಿ ನಾವು ಸರ್ಕಾರಿ ಶಿಕ್ಷಕರಿಗಿಂತ ಹೆಚ್ಚು ಕೆಲಸ ಮಾಡಿದರೂ,ಅವರಂತೆಯೇ ಸಮಾನವಾದ ಸೌಲಭ್ಯ ಇಲ್ಲವಾಗಿದೆ. ಜಿ.ಕುಮಾರನಾಯಕ್ ವರದಿ ಸೌಲಭ್ಯ ನಮಗೆ ಸಿಕ್ಕಿಲ್ಲ ಎಂದರು.

ಶಿಕ್ಷಕರ ಬೇಡಿಕೆಗಳು:

ಸಂಘದ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ನಮ್ಮನ್ನೂ ಸರ್ಕಾರಿ ನೌಕರರೆಂದು ಪರಿಗಣಿಸುವಂತಾಗಲು ನಿರ್ದೇಶನಾಲಯ ರಚನೆ ಮಾಡಬೇಕು. ಇಲ್ಲವಾದರೆ ಆಯಾಯ ಇಲಾಖೆಗಳ ವ್ಯಾಪ್ತಿಗೆ ನಮ್ಮ ಶಾಲೆಗಳನ್ನು ವಿಲೀನ ಮಾಡಬೇಕು ಎಂದು ಒತ್ತಾಯಿಸಿದರು.

ಅಪಘಾತ ಮತ್ತಿತರ ಸಂದರ್ಭಗಳಲ್ಲಿ ನೆರವಾಗಲು ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆ ವ್ಯಾಪ್ತಿಗೆ ನಮ್ಮನ್ನೂ ಸೇರಿಸಬೇಕು. ನಮ್ಮ ತಿಂಗಳ ಸಂಬಳದಲ್ಲಿ ಬಾಡಿಗೆ ಭತ್ಯೆಯನ್ನು ಕಟಾವಣೆ ಮಾಡಬಾರದು. ಬೇರೆ ವಸತಿ ಶಾಲೆಗಳ ಶಿಕ್ಷಕರಿಗೆ ನೀಡುತ್ತಿರುವಂತೆ ಸಂಪೂರ್ಣ ಸಂಬಳ ಪಾವತಿ ಮಾಡಬೇಕು. ಇತರರಿಗೆ ಕೊಡುತ್ತಿರುವಂತೆಯೇ ನಮಗೂ ಶೇ.೧೦ರಷ್ಟು ವಿಶೇಷ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು. ಹಾಗೆಯೇ ಕರ್ನಾಟಕ ಆರೋಗ್ಯ ಸಂಜೀವಿನಿ ಸೌಲಭ್ಯ ನಮಗೂ ಸಿಗಬೇಕು. ಮರಣ-ನಿವೃತ್ತಿ ಉಪಧನ(ಡಿಸಿಆರ್‌ಜಿ) ನಮಗೂ ಸಿಗಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳಾದ ಶಂಕರ್, ನೇಹಾಲ್, ಕೀರ್ತಿ ಇತರರು ಉಪಸ್ಥಿತರಿದ್ದರು.