ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ರೈತರು ಹಾಗೂ ಬಡಜನರು ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶನಿವಾರ ಶಾಂತಿಯುತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾಧ್ಯಮದೊಂದಿಗೆ ಮಾತನಾಡಿ, ಬೀರನಹಳ್ಳಿ ಕೆರೆ ಪ್ರದೇಶದಲ್ಲಿ ೨೦೦೭ರಲ್ಲಿ ಬಡವರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡಿದ್ದ ಸರ್ಕಾರ, ನಂತರ ಅದನ್ನು ಹಿಂಪಡೆದಿದ್ದು, ಈವರೆಗೂ ಪರ್ಯಾಯ ನಿವೇಶನ ಕಲ್ಪಿಸಿಲ್ಲ ಎಂದು ಆರೋಪಿಸಿದರು. ಇದರಿಂದಾಗಿ ಅಲ್ಲಿನ ೭೨ ಕುಟುಂಬಗಳು ಇಂದು ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅವರಿಗೆ ಪರ್ಯಾಯ ನಿವೇಶನ ನೀಡುವ ಮೂಲಕ ಬದುಕನ್ನು ಉಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಇದೇ ರೀತಿಯ ಸಮಸ್ಯೆ ಬೇಲೂರು ತಾಲೂಕಿನ ಬಂಟೆನಹಳ್ಳಿ ಗ್ರಾಮದಲ್ಲಿಯೂ ಉಂಟಾಗಿದೆ. ಅಲ್ಲಿ ೪೦೦ಕ್ಕೂ ಹೆಚ್ಚು ವಿವಿಧ ಸಮುದಾಯಗಳಿಗೆ ಸೇರಿದ ಜನರು ವಾಸವಾಗಿದ್ದು, ಅವರಿಗೆ ಇದುವರೆಗೂ ನಿವೇಶನ ನೀಡದೆ ವಂಚಿಸಲಾಗುತ್ತಿದೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡವರಿಗೆ ನಿವೇಶನ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವು ಹಾಕುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಅಲ್ಲದೆ ಜಿಲ್ಲೆಯಲ್ಲಿ ವಿವಿಧೆಡೆ ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರ ಪಡೆದ ಫಲಾನುಭವಿಗಳ ಹಕ್ಕುಪತ್ರಗಳನ್ನು ತಡೆಹಿಡಿಯುವ ಕೆಲಸ ನಡೆಯುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು. ಇದು ಬಡವರ ಹಕ್ಕುಗಳನ್ನು ಕಸಿದುಕೊಳ್ಳುವ ಹಾಗೂ ವಂಚಿಸುವ ಕ್ರಮವಾಗಿದ್ದು, ಸರ್ಕಾರ ಕೂಡಲೇ ಇಂತಹ ಅವ್ಯವಹಾರಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ರೈತ ಸಂಘ ತನ್ನದೇ ರೀತಿಯಲ್ಲಿ ಪ್ರತ್ಯುತ್ತರ ನೀಡಲಿದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಮೊಹಮ್ಮದ್ ಸಾಧಿಕ್ ಪಾಷ, ಪವಿತ್ರ ಇತರರು ಉಪಸ್ಥಿತರಿದ್ದರು.