ಸಾರಾಂಶ
ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಹಳೇ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವಂತೆ ಆಗ್ರಹಿಸಿ ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದೆಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ಹೇಳಿದರು.ನಗರದ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳ ನದಲ್ಲಿ ರಾಜ್ಯ ಮೂಲೆ ಮೂಲೆಗಳಿಂದ ಸುಮಾರು 2 ರಿಂದ 3 ಲಕ್ಷ ನೌಕರರು ಭಾಗವಹಿಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 5000 ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ನೌಕರರುಗಳು ಬಸ್, ರೈಲು ಹಾಗೂ ಖಾಸಗಿ ವಾಹನಗಳಲ್ಲಿ ಸಮ್ಮೇಳನಕ್ಕೆ ತೆರಳುತ್ತಿದ್ದಾರೆ. ಬಸ್ ಮೂಲಕ ತೆರಳುವ ನೌಕರರಿಗೆ ಜಿಲ್ಲಾ ಕೇಂದ್ರ ಸ್ಥಾನ ಹಾಗೂ ಆಯಾ ತಾಲೂಕು ಕೇಂದ್ರಗಳಲ್ಲಿ ಬಸ್ಗಳ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಹಾಗೂ ಆಯಾ ತಾಲೂಕು ಶಾಖೆಗಳ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಕೇಂದ್ರ ಚಿತ್ರದುರ್ಗದಿಂದ 20 ಬಸ್ಸು ಹಾಗೂ ಆಯಾ ತಾಲೂಕು ಕೇಂದ್ರಗಳಿಂದ ತಲಾ 10 ಬಸ್ಗಳು ಒಟ್ಟು 70 ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು ಚಿತ್ರದುರ್ಗದ ಪ್ರವಾಸಿ ಮಂದಿರದ ಮುಂಭಾಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಸ್ಸುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ಫೆ. 27ರ ಮಂಗಳವಾರ ಬೆಳಗ್ಗೆ 6 ಗಂಟೆಗೆ ಬಸ್ ಹೊರಡುವುದರಿಂದ ನೌಕರರು ಸ್ಥಳದಲ್ಲಿ ಹಾಜರಿದ್ದು ಸಮ್ಮೇಳನಕ್ಕೆ ಹೋಗಬಹುದಾಗಿರುತ್ತದೆ ಎಂದು ತಿಮ್ಮಾರೆಡ್ಡಿ ತಿಳಿಸಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಫೆ.27ಮತ್ತು 28 ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು (ಓಓಡಿ ಸೌಲಭ್ಯ) ರಾಜ್ಯ ಸರ್ಕಾರ ಮಂಜೂರು ಮಾಡಿ ಆದೇಶ ಹೊರಡಿಸಿದ್ದು ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ತಮ್ಮ ಇಲಾಖಾ ಮುಖ್ಯಸ್ಥರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಸೌಲಭ್ಯ ಪಡೆಯಬಹುದಾಗಿರುತ್ತದೆ ಎಂದರು. ಜಿಲ್ಲಾ ಕಾರ್ಯದರ್ಶಿ ಎಸ್ ಕೆ. ಮಂಜುನಾಥ್, ಜಿಲ್ಲಾ ಖಜಾಂಚಿ ವೀರೇಶ್, ರಾಜ್ಯ ಪರಿಷತ್ ಸದಸ್ಯ ಬಾಗೇಶ್ ಆರ್. ಉಗ್ರಾಣ ಜಿಲ್ಲಾ ಗೌರವಾಧ್ಯಕ್ಷ ಲೋಕೇಶ್ ಸುಧಾ, ಸಿದ್ದೇಶ್, ಬಾಲಪ್ಪ ಚಂದ್ರನಾಯ್ಕ್ ಇದ್ದರು.