ಸಿದ್ದಾಪುರ: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಅಭಾವ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆಗಳಿದ್ದು, ತಕ್ಷಣ ಅವುಗಳನ್ನು ಪರಿಹರಿಸದಿದ್ದರೆ ಸಾರ್ವಜನಿಕರನ್ನು ಸಂಘಟಿಸಿ ಹೋರಾಟ ನಡೆಸಲಾಗುವುದು ಎಂದು ಸಿಪಿಐಎಂ ಸಂಚಾಲನಾ ಸಮಿತಿ ಕಾರ್ಯದರ್ಶಿ ಎನ್.ಡಿ. ಕುಟ್ಟಪ್ಪನ್ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯನ್ನು ಸುತ್ತಮುತ್ತಲಿನ ಗ್ರಾಮಗಳ ನೂರಾರು ಕಾರ್ಮಿಕರು ಹಾಗೂ ದುಡಿಯುವ ವರ್ಗದ ಜನರು ಹೆಚ್ಚಾಗಿ ಅವಲಂಬಿಸಿದ್ದು, ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲ. ಹೆರಿಗೆ ತಜ್ಞ ವೈದ್ಯರ ಕೊರತೆ ಇದೆ. ಡಿ. ಗ್ರೂಪ್ ನೌಕರರ ಅಭಾವದಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಸಿಪಿಐಎಂ ಮುಖಂಡ ಅದ್ದು ಮಾತನಾಡಿ, ಆಸ್ಪತ್ರೆಯಲ್ಲಿರುವ ಕೆಲವು ಯಂತ್ರೋಪಕರಣಗಳು ಕಾರ್ಯನಿರ್ವಹಿಸುತ್ತಿಲ್ಲ. ಲ್ಯಾಬ್, ಎಕ್ಸ್ ರೇ ಇದ್ದರೂ ಅಗತ್ಯ ತಂತ್ರಜ್ಞರ ಕೊರತೆ ಇದೆ. ಆಂಬುಲೆನ್ಸ್ಗಳಿದ್ದರೂ ಚಾಲಕರ ಅಭಾವದಿಂದ ಸಾರ್ವಜನಿಕರಿಗೆ ತುರ್ತು ಸೇವೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಹೇಳಿದರು.ಸ್ಪತ್ರೆಯಲ್ಲಿ ಅಗತ್ಯ ಔಷಧಗಳು ಲಭ್ಯವಿಲ್ಲದ ಕಾರಣ ರೋಗಿಗಳು ಹೊರಗಡೆಯಿಂದ ಔಷಧ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಆಸ್ಪತ್ರೆಯ ಅವ್ಯವಸ್ಥೆಗಳನ್ನು ಶೀಘ್ರದಲ್ಲಿ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಒಗ್ಗೂಡಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಿಪಿಐಎಂ ಸಂಚಾಲನಾ ಸಮಿತಿ ಪ್ರಮುಖರಾದ ಬೈಜು, ಮರ್ಕಾರ್ ಇದ್ದರು.