ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐಎಂನಿಂದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕೇಂದ್ರ ಸಚಿವ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಚಿವರ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐಎಂನಿಂದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕೇಂದ್ರ ಸಚಿವ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಚಿವರ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕರ್ನಾಟಕದ ತೀರ್ಮಾನಕ್ಕೆ ಕೇಂದ್ರದ ಬಿಜೆಪಿ-ಎನ್.ಡಿ.ಎ ಸರ್ಕಾರ ಕೂಡಲೇ ಅನುಮೋದನೆ ನೀಡಬೇಕು. ಇದನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರಿಸಿ ಕೇಂದ್ರದಲ್ಲಿ ಇರುವಂತೆ ಶೇ.17 ಮತ್ತು ಶೇ 7 ರ ಜಾರಿಗೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ರಾಜ್ಯದ ಸಂಸದರು ವಿಶೇಷ ಒತ್ತಡದ ಪ್ರಯತ್ನಗಳನ್ನು ನಡೆಸಬೇಕು. ಷೆಡ್ಯೂಲ್ 9 ಕ್ಕೆ ಸೇರ್ಪಡೆ ಮಾಡದಿರುವುದು ಇಂದಿನ ಒಟ್ಟು ಸಮಸ್ಯೆಯ ಒಂದು ಪ್ರಧಾನ ಅಂಶವಾಗಿದ್ದು ಈ ಸಮಸ್ಯೆಯ ಇತ್ಯಾರ್ಥಕ್ಕೆ ಕೇಂದ್ರದ ಮೇಲೆ ರಾಜ್ಯದ ಸಂಸದರುಗಳು ಒತ್ತಡ ತರಲು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಇಂದಿನ ನಿರುದ್ಯೋಗ ಸಮಸ್ಯೆಯ ಗಂಭೀರತೆಯನ್ನ ಅರ್ಥ ಮಾಡಿಕೊಂಡು ಭಾರತದ ಒಕ್ಕೂಟದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಮತ್ತು ಬ್ಯಾಕ್ ಲಾಗ್ ಹುದ್ದೆಗಳನ್ನು ಯಾವುದೇ ಸಂದರ್ಭದಲ್ಲಿ ಸಾಮಾನ್ಯ ಗುಂಪಿಗೆ ವರ್ಗಾಯಿಸಬಾರದು. ಹಾಗೆಯೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸುಮಾರು 3 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಲು ಒತ್ತಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳು ಮತ್ತು ಸಂಸ್ಥೆಗಳಲ್ಲಿ ಖಾಯಂ ನೇಮಕಾತಿಯೇ ಸ್ಥಗಿತಗೊಂಡಂತಾಗಿದೆ ಅಥವಾ ಇಲ್ಲದಂತಾಗಿದೆ. ಇದರಿಂದ ವಾಸ್ತವವಾಗಿ ಮೀಸಲಾತಿಯೇ ಇಲ್ಲದಂತಾಗಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕ ರಂಗಗಳಲ್ಲೂ ಖಾಯಂ ಉದ್ಯೋಗಗಳನ್ನು ತುಂಬಬೇಕು ಮತ್ತು ಮೀಸಲಾತಿಯನ್ನು ರಕ್ಷಿಸಬೇಕು. ಉದಾರೀಕರಣ ಮತ್ತು ಖಾಸಗೀಕರಣದಿಂದ ಪ್ರಧಾನವಾಗಿ ಉದ್ಯೋಗಗಳ ಸೃಷ್ಟಿಯು ಖಾಸಗಿ ರಂಗದಲ್ಲೇ ಹೆಚ್ಚಾಗಿ ಇರುವುದು. ಆದರೆ ಇಲ್ಲಿ ಮೀಸಲಾತಿ ನೀತಿಯೇ ಇಲ್ಲವಾಗಿದೆ. ಆದ್ದರಿಂದ ಖಾಸಗೀ ರಂಗದಲ್ಲಿಯೂ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಮೀಸಲಾತಿ ನೀತಿಯು ಅತ್ಯಂತ ಸೀಮಿತಗೊಂಡ ಅವಕಾಶವಾಗಿ ಬಿಡುತ್ತದೆ. ಭವಿಷ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಬದಲಾಗುತ್ತಿರುವ ಸನ್ನಿವೇಶದಲ್ಲಿ ಖಾಸಗಿ ರಂಗದಲ್ಲಿ ನಮ್ಮ ಭಾರತದ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಸಾಧನೆಯಲ್ಲಿ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ಎಲ್ಲಾ ಒತ್ತಡ ಹಾಕಬೇಕಾಗಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್‌ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ. ಉಮೇಶ್, ಕಮಲ, ಎಸ್.ಡಿ.ಪಾರ್ವತಮ್ಮ ದಲಿತ ಹಕ್ಕುಗಳ ಸಮಿತಿಯ ರಾಜು ವೆಂಕಟಪ್ಪ, ಕಲ್ಪನ, ಖಲೀಲ್, ಶಂಕರಪ್ಪ, ರಂಗಧಾಂಯ್ಯ, ರಾಘವೇಂದ್ರ ಎಸ್, ಸಂತೋಷ್, ಗೋವಿಂದರಾಜು, ಹನುಮೇಶ್, ಅಶ್ವತ್ಥಪ್ಪ, ಕೃಷ್ಣಪ್ಪ, ಇನ್ನು ಮುಂತಾದವರು ಉಪಸ್ಥಿತರಿದ್ದರು.