ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ಪಾಸ್ ವಿತರಿಸುವುದು, ಬಸ್ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಕೇಂದ್ರ ಬಸ್ ನಿಲ್ದಾಣ ಮುಂದೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ, ನಂತರ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರುಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಬಸ್ಪಾಸ್ ಒದಗಿಸುವ ಅವಶ್ಯಕತೆ ಇದೆ. ಬಸ್ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಬಸ್ಪಾಸ್ ಅನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿ ಇದೆ. ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.
ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ಪಾಸ್ ವಿತರಣೆ ಮಾಡುವಂತೆ ಕ್ರಮಕೈಗೊಳ್ಳಬೇಕು. ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ವಿನಾಕಾರಣ ಕೆಲಸವಿಲ್ಲದೇ ಬಸ್ಗಳಲ್ಲಿ ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್ಗಳ ಸಂಖ್ಯೆ ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ. ಸರಕಾರ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು. ಯಾವ ಹಳ್ಳಿಗಳಿಗೆ ಬಸ್ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ಗಳ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕು ಎಂದು ಒತ್ತಾಯ ಪಡಿಸಿದರು.ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ಮಲ್ಲಿಕಾರ್ಜುನ ಮಾಳಿ, ಶ್ರೀಕಾಂತ ರೆಡ್ಡಿ, ಸಂದೀಪ ಅರಳಗುಂಡಗಿ, ಕವಿತಾ ಬಿರಾದಾರ, ಐಶ್ವರ್ಯ ಆಸಂಗಿ, ಆರತಿ ನಾವಿ, ಶಿಲ್ಪಾ ಪೂಜಾರಿ, ಬಾಲಾಜಿ ಬಿರಾದಾರ, ಶಿವಾಜಿ, ಶ್ರೀಕಾಂತ, ಸ್ನೇಹಾ ಹಿರೇಮಠ ಮುಂತಾದವರು ಇದ್ದರು.