ಪ್ರಜಾಸತ್ತಾತ್ಮಕ ನೆಲೆಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ನಿರತರಾಗಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ತೆಗೆದುಕೊಂಡಿತು
ಹಾವೇರಿ: ನೀಟ್ ಹಗರಣದ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟಿಸಿದ ವಿದ್ಯಾರ್ಥಿ ಯುವಜನರ ಮೇಲಿನ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಹಗರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಎಸ್ಎಫ್ಐ, ಡಿವೈಎಫ್ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಬುಧವಾರ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆ ವೈಫಲ್ಯ, ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್ನಲ್ಲಿ ಸೋನಂ ವಾಂಗ್ಚುಕ್ ಮತ್ತು ಹಲವಾರು ವಿದ್ಯಾರ್ಥಿಗಳು ಹಾಗೂ ಯುವಜನರು ಕಳೆದ 22 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡರೂ ಕೇಂದ್ರ ಸರ್ಕಾರ ಮಾತುಕತೆ ನಡೆಸುವ ಸೌಜನ್ಯ ತೋರದೆ ಅಸಡ್ಡೆ ತೋರಿತು.ಪ್ರಜಾಸತ್ತಾತ್ಮಕ ನೆಲೆಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ನಿರತರಾಗಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ತೆಗೆದುಕೊಂಡಿತು. ಅಲ್ಲದೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಯುವಜನರ ಮೇಲೆ ಪೋಲಿಸರನ್ನು ಛೂ ಬಿಟ್ಟು ಟಿಯರ್ ಗ್ಯಾಸ್, ಮನಬಂದಂತೆ ಲಾಠಿ ಚಾರ್ಜ್ ನಡೆಸಿ ಅಮಾನುಷವಾಗಿ ಕ್ರೌರ್ಯ ಮೆರೆಯಿತು. ಕೇಂದ್ರ ಬಿಜೆಪಿ ಸರ್ಕಾರದ ಈ ಕ್ರೌರ್ಯವನ್ನು ಎಸ್ಎಫ್ಐ-ಡಿವೈಎಫ್ಐ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತವೆ ಎಂದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್., ಮಾತನಾಡಿ, 21 ಜನ ವಿದ್ಯಾರ್ಥಿಗಳ ಪ್ರಾಣಾಹುತಿ ನಡೆದರೂ, ಈ ಅಕ್ರಮ ತಡೆಯಲು ಯಾವುದೇ ಕ್ರಮ ಕೈಗೊಳ್ಳದೇ ಸಂಪೂರ್ಣ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ನೀಟ್ ಹಗರಣದಲ್ಲಿ ತನ್ನ ಸರ್ಕಾರದ ಕೈವಾಡ ಇದೆ ಎಂಬುದನ್ನು ಸಾಬೀತುಗೊಳಿಸಿದ್ದಾರೆ. ಇದೀಗ ನೀಟ್ ಪ್ರಶ್ನೆ ಪತ್ರಿಕೆ ಘೋರ ಪಾಪ ಎಂದು ಅನುಕಂಪದ ಮಾತುಗಳನ್ನಾಡುತ್ತಿರುವುದು ಪ್ರಧಾನಿಯವರ ಆತ್ಮವಂಚನೆಯಾಗಿದೆ. ಪರೀಕ್ಷಾ ಅಕ್ರಮಗಳ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳ ಜೈನ್, ಎಸ್ಎಫ್ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಂಜಯ್ ಗಾಂಧಿ, ಖಾದರ್ ಧಾರವಾಡ, ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯೆ ರೇಣುಕಾ ಕಹರ, ಮುಖಂಡರಾದ ಖಲಂದರ್ ಅಲ್ಲಿಗೌಡ್ರು, ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ಕುಮಾರ ನಗವತ್, ಭವ್ಯ ಓಲೇಕಾರ್, ಸುನೀತಾ ಮಾದರ, ಸಂಗೀತ ಆರ್.ಸಿ, ರಂಜಿತ ಆಲೂರ, ಜಾಸ್ಮಿನ್, ರಕ್ಷಿತಾ ಎಸ್, ರಾಜೇಶ್ವರಿ ಎಸ್.ಎಂ, ನಾಗಿನ್ ನದಾಫ್, ವಿನಾಯಕ ಲಮಾಣಿ, ಲೋಹಿತ್ ಹರಿಜನ, ಸಂದೀಪ್ ಪವಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.