ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ

| Published : Jun 02 2024, 01:46 AM IST

ಸಾರಾಂಶ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಬಿಜೆಪಿ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಬಿಜೆಪಿ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾದ ೧೮೭ ಕೋಟಿ ರೂ.ಗಳ ಹಗರಣ ನಡೆದಿದೆ. ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟ್‌ನಲ್ಲೂ ಸಚಿವ ನಾಗೇಂದ್ರ ಹೆಸರು ಉಲ್ಲೇಖವಾಗಿದೆ. ಆದರೂ ಸರ್ಕಾರ ಸಚಿವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂಬ ಉದ್ದೇಶದಿಂದ ಕರ್ನಾಟಕದ ಹಣವನ್ನು ಅಕ್ರಮವಾಗಿ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ದಾರೆ. ಕಾಂಗ್ರೆಸ್‌ನವರ ಭ್ರಷ್ಟಾಚಾರಕ್ಕೆ ತಾಜಾ ಉದಾಹರಣೆ ಎಂಬಂತೆ ಎಸ್‌ಟಿ ಅಭಿವೃದ್ಧಿ ನಿಗಮದ ಹಣವನ್ನು ವಿವಿಧ ಅಕೌಂಟ್‌ಗಳನ್ನು ತೆರೆದು ಅಕ್ರಮವಾಗಿ ಹೈದರಾಬಾದ್‌ನ ಐಟಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಈ ಅಕ್ರಮಕ್ಕೆ ನೇರ ಹೊಣೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಶ್ವರಪ್ಪನವರ ಮೇಲೆ ಆರೋಪ ಬಂದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ವಿರೋಧ ಪಕ್ಷದಲ್ಲಿದ್ದ ಇದೇ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಆಗ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಅದೇ ರೀತಿ ಸಿದ್ದರಾಮಯ್ಯನವರೇ ನೀವೂ ರಾಜೀನಾಮೆ ನೀಡಿ, ನೈತಿಕತೆ ಪಾಠ ಹೇಳುವ ನಿಮಗೆ ನೈತಿಕತೆ ಇಲ್ಲವೆ? ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ಎಟಿಎಂ ಎಂದು ಬಿಜೆಪಿ ಆಪಾದನೆ ಮಾಡಿತ್ತು. ಈಗ ಅದು ನಿಜವಾಗಿದೆ ಎಂದರು.ಮುಖಂಡ ಎಸ್.ಪಿ.ಚಿದಾನಂದ ಮಾತನಾಡಿ, ಪರಿಶಿಷ್ಟ ವರ್ಗಗಳಿಗೆ ಮೀಸಲಾಗಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡು ಆ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಈಗ ಪರಿಶಿಷ್ಟ ಪಂಗಡ ನಿಗಮದ ೧೮೭ ಕೋಟಿ ರೂ. ಅವ್ಯವಹಾರ ಮಾಡಿ ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಟೀಕಿಸಿದರು.ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖಂಡರಾದ ಎಸ್.ಶಿವಪ್ರಸಾದ್, ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಪ್ರಧಾನ ಕಾರ್ಯದರ್ಶಿ ಟಿ.ಕೆ.ಧನುಷ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್‌ಗೌಡ, ಗಂಗರಾಜು, ನಗರ ಬಿಜೆಪಿ ಅಧ್ಯಕ್ಷ ಹನುಮಂತರಾಜು, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ನಗರಪಾಲಿಕೆ ಮಾಜಿ ಸದಸ್ಯ ವಿಷ್ಣುವರ್ಧನ್, ಮುಖಂಡರಾದ ಹನುಮಂತರಾಯಪ್ಪ, ಅಂಜನ್‌ಮೂರ್ತಿ, ಮನೋಹರಗೌಡ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ವೆಂಕಟೇಶಾಚಾರ್, ನಿಟ್ಟೂರು ಪ್ರಕಾಶ್, ವಿಜಯಕುಮಾರ್ ಮೊದಲಾದವರು ಭಾಗವಹಿಸಿದ್ದರು.