ಶೋಭಾಯಾತ್ರೆಯಲ್ಲಿ ಡಿಜೆಗೆ ಅನುಮತಿಗೆ ಆಗ್ರಹ

| Published : Sep 11 2025, 01:00 AM IST

ಸಾರಾಂಶ

ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡಿಜೆಗೆ ಅನುಮತಿ ಕೊಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾದಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿರುವ ಚಿತ್ರದುರ್ಗದ ಪ್ರತಿಷ್ಠಿತ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ರಾಜ್ಯ ಸರ್ಕಾರ ಡಿಜೆಗೆ ಅನುಮತಿ ನೀಡದಿರುವುದನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಬುಧವಾರ ಸಂಜೆ ಒನಕೆ ಓಬವ್ವ ವೃತ್ತದಲ್ಲಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಜ್ಞಾನ ಕಾಲೇಜು ಎದುರಿಗೆ ಇರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಪೆಂಡಾಲ್ ಸಮೀಪದಿಂದ ಮೆರವಣಿಗೆ ಮೂಲಕ ಹೊರಟ ಪ್ರತಿಭಟನಾಕಾರರು ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತದ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸುತ್ತಲೂ ಬ್ಯಾರಿಕೇಡ್‍ಗಳನ್ನು ಅಡ್ಡ ಇಟ್ಟು ಪೊಲೀಸರು ಪ್ರತಿಭಟನಾಕಾರರ ನಿರ್ಬಂಧಿಸಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, 18 ವರ್ಷಗಳಿಂದಲೂ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಯಶಸ್ವಿಯಾಗಿ ನಡೆದಿದೆ. ಸಣ್ಣ ಅಹಿತಕರ ಘಟನೆಯಾಗಿಲ್ಲ. ರಾಜ್ಯ ಸರ್ಕಾರ ಏಕೆ ಡಿಜೆಗೆ ಅನುಮತಿ ನೀಡುತ್ತಿಲ್ಲ. ವಿಶ್ವಹಿಂದೂ ಪರಿಷತ್‍ನ ಶರಣ್ ಪಂಪ್‍ವೆಲ್ ಚಿತ್ರದುರ್ಗ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿರುವುದನ್ನು ಹಿಂದಕ್ಕೆ ಪಡೆಯಬೇಕು. ರಾಜ್ಯ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶಿಸುತ್ತಿದ್ದಾರೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಣಪತಿ ಮೆರವಣಿಗೆಗೆ ರಾಜ್ಯ ಸರ್ಕಾರ ಡಿಜೆಗೆ ಅನುಮತಿ ಕೊಟ್ಟಿದೆ. ಅದೇ ರೀತಿ ಇಲ್ಲಿಯೂ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಬಜರಂಗದಳದ ಪ್ರಬಂಜನ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಉಮೇಶ್ ಕಾರಜೋಳ, ಭದ್ರಿನಾಥ್, ಸಿದ್ದಾರ್ಥಗುಂಡಾರ್ಪಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಚನ್ನಕೇಶವ, ಶರಣ್‍ಕುಮಾರ್, ಸಂದೀಪ್ ಬಜರಂಗದಳದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.